ಕಲಬುರಗಿ: ‘ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ಹಾಳಾದ ಬೆಳೆಗಳಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿ ಅನ್ವಯ ನೀಡುವ ಪರಿಹಾರದ ಜೊತೆಗೆ ಪ್ರತಿ ಹೆಕ್ಟೇರ್ಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ₹8,500 ಪರಿಹಾರ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ನದಿಗೆ ಹರಿದು ಬಂದ ಅಪಾರ ಪ್ರಮಾಣದ ನೀರಿನಿಂದಾಗಿ ಜಲಾವೃತವಾದ ಪ್ರದೇಶಗಳಲ್ಲಿ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದರು.
‘ಬೆಳೆ ನಷ್ಟವನ್ನು ತುಂಬಿ ಕೊಡುವುದಕ್ಕಾಗಿ ಸರ್ಕಾರ ₹2 ಸಾವಿರ ಕೋಟಿಗೂ ಅಧಿಕ ಹಣವನ್ನು ವ್ಯಯಿಸಲಿದೆ’ ಎಂದರು.
ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ; ಉತ್ತರ ಕರ್ನಾಟಕದ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ ಆಗಿದೆ. ಮಹಾರಾಷ್ಟ್ರದಿಂದ ಈ ಬಾರಿ ಹೆಚ್ಚುವರಿ ನೀರನ್ನು ಹರಿಬಿಟ್ಟಿದ್ದರಿಂದ ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ ಎಂದು ತಿಳಿಸಿದರು.
9.60 ಲಕ್ಷ ಹೆಕ್ಟೇರ್ ಹಾನಿ: ‘ರಾಜ್ಯದಲ್ಲಿ ಮಳೆಯಿಂದಾಗಿ 9,60,578 ಹೆಕ್ಟೇರ್ನಲ್ಲಿ ಬೆಳೆ ಹಾನಿಯಾಗಿದ್ದು, ಆ ಪೈಕಿ ಶೇ 95ರಷ್ಟು ಬೆಳೆ ಹಾನಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಸಂಭವಿಸಿದೆ.
ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಟ್ಟು 117 ಗ್ರಾಮಗಳು ತೊಂದರೆಗೊಳಗಾಗಿವೆ. ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ 80 ಕಾಳಜಿ ಕೇಂದ್ರ ತೆರೆಯಲಾಗಿದೆ. ಜೂನ್ 1ರಿಂದ ಇಲ್ಲಿಯವರೆಗೆ ಮಳೆ ಸಂಬಂಧಿ ಅವಘಡಗಳಿಂದಾಗಿ 52 ಮಂದಿ ಮೃತ ಪಟ್ಟಿದ್ದಾರೆ. 422 ಜಾನುವಾರು ಮೃತಪಟ್ಟಿವೆ. ಜೀವಹಾನಿಗೆ ಪರಿಹಾರ ನೀಡಲಾಗಿದೆ’ ಎಂದರು.
ನೆರೆ ಪೀಡಿತ ಜಿಲ್ಲೆಗಳಲ್ಲಿ ರಸ್ತೆ, ಸೇತುವೆ, ಶಾಲೆ, ಅಂಗನವಾಡಿ, ವಿದ್ಯುತ್ ಟ್ರಾನ್ಸ್ಫಾರ್ಮರ್ ಹಾಳಾಗಿರುವುದು ಸೇರಿದಂತೆ ಇತರ ಹಾನಿಗಳ ಬಗ್ಗೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಸಮೀಕ್ಷೆ ಪೂರ್ಣಗೊಂಡು ವರದಿ ಬಂದ ಕೂಡಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪ್ರತಿ ಕ್ಷೇತ್ರಕ್ಕೆ ವಿಶೇಷ ಅನುದಾನದ ರೂಪದಲ್ಲಿ ₹25 ಕೋಟಿಯಿಂದ ₹50 ಕೋಟಿ ನೀಡಲಾಗಿದೆ’ ಎಂದು ಹೇಳಿದರು.
ಜಂಟಿ ಸಮೀಕ್ಷೆ ಬಳಿಕ ಸಾಲಮನ್ನಾ ತೀರ್ಮಾನ: ‘ಆದಷ್ಟು ಶೀಘ್ರ ಜಂಟಿ ಸಮೀಕ್ಷೆ ನಡೆಸಿ ಪರಿಹಾರ ನೀಡುವುದು ನಮ್ಮ ಮೊದಲ ಗುರಿ. ರೈತರ ಬೆಳೆ ಸಾಲ ಮನ್ನಾ ಮಾಡುವ ಬಗ್ಗೆ ನಂತರ ಪರಿಶೀಲನೆ ನಡೆಸುತ್ತೇವೆ’ ಎಂದು ಸಿ.ಎಂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪತ್ರಿಕಾಗೋಷ್ಠಿಯಿಂದ ನಿರ್ಗಮಿಸುವ ವೇಳೆ ಮತ್ತೆ ಈ ಪ್ರಶ್ನೆ ಕೇಳಿದ ವರದಿಗಾರರಿಗೆ, ‘ಬಿಜೆಪಿಯವರು ಬೆಳೆ ಸಾಲಮನ್ನಾ ಮಾಡಿದ್ದರೇ’ ಎಂದು ಮರು ಪ್ರಶ್ನೆ ಹಾಕಿದರು.
ರಾಜ್ಯದಲ್ಲಿ ಪ್ರವಾಹ ನಿರ್ವಹಣೆಗಾಗಿ ವಿಶೇಷ ಪ್ಯಾಕೇಜ್ ನೀಡುವಂತೆ ಪ್ರಧಾನಿ ಗೃಹಸಚಿವರು ಹಣಕಾಸು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದುಸಿದ್ದರಾಮಯ್ಯ. ಮುಖ್ಯಮಂತ್ರಿ
ವೈಮಾನಿಕ ಸಮೀಕ್ಷೆ ನಡೆಸಿದ ಸಿ.ಎಂ
ಕಲಬುರಗಿ: ಭೀಮಾ ಹಾಗೂ ಮಾಂಜ್ರಾ ನದಿಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಸಮಸ್ಗೆಗಳನ್ನು ಅರಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕಲಬುರಗಿ ಬೀದರ್ ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಪ್ರವಾಹದ ಅವಾಂತರ ವೀಕ್ಷಿಸಿದರು. ನಂತರ ಕಲಬುರಗಿಯಲ್ಲಿ ನಾಲ್ಕೂ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಅಗತ್ಯ ಇರುವ ಕಡೆ ತಾತ್ಕಾಲಿಕ ಶಾಶ್ವತ ತಡೆಗೋಡೆ ಕಟ್ಟಿಸಿ ಅನಾಹುತದ ಪ್ರಮಾಣ ತಪ್ಪಿಸಲು ಸೂಚಿಸಿದರು. ಬಾಧಿತ ಗ್ರಾಮಗಳಲ್ಲಿ ಶಾಲೆಗಳ ಧಾರಣ ಸಾಮರ್ಥ್ಯ ಪರೀಕ್ಷಿಸುವುದನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳು ಗಮನಿಸಬೇಕು. ಕಟ್ಟಡಗಳು ಶಿಥಿಲಗೊಂಡಿದ್ದರೆ ಅಂತಹ ಶಾಲೆಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುವುದನ್ನು ಕಡ್ಡಾಯವಾಗಿ ಮಾಡಬೇಕು. ಇದರಲ್ಲಿ ನಿರ್ಲಕ್ಷ್ಯ ತೋರಿದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
‘ನೀರುಹಂಚಿಕೆ: ರಾಜ್ಯದ ಹಿತಾಸಕ್ತಿ ರಕ್ಷಣೆ’
ಮಹಾರಾಷ್ಟ್ರವು ಭೀಮಾ ನದಿಯಲ್ಲಿ ರಾಜ್ಯದ ಪಾಲನ್ನು ತಪ್ಪಿಸಲು ಹೆಚ್ಚುವರಿ ಜಲಾಶಯಗಳನ್ನು ನಿರ್ಮಿಸಿಕೊಂಡಿರುವ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ‘ಎರಡೂ ರಾಜ್ಯಗಳ ಮಧ್ಯದ ಜಲವಿವಾದವು ಕೇಂದ್ರ ಜಲ ಆಯೋಗದ ಮುಂದೆ ಇದೆ. ರಾಜ್ಯದ ಹಿತಾಸಕ್ತಿಯನ್ನು ಕಾಯಲು ಬದ್ಧರಾಗಿದ್ದೇವೆ’ ಎಂದರು.
‘ಮಹಾ’ ಮಾದರಿಯಲ್ಲೇ ಪರಿಹಾರಕ್ಕೆ ಒತ್ತಾಯ
ಪ್ರವಾಹ ನಿರ್ವಹಣೆಗಾಗಿ ₹2200 ಕೋಟಿ ಪರಿಹಾರ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಮಹಾರಾಷ್ಟ್ರಕ್ಕೆ ಕೊಡುವ ಮಾದರಿಯಲ್ಲೇ ರಾಜ್ಯಕ್ಕೂ ಪರಿಹಾರ ಹಣವನ್ನು ಬಿಡುಗಡೆಗೊಳಿಸಬೇಕು ಎಂದು ಕೇಂದ್ರವನ್ನು ಒತ್ತಾಯಿಸಲು ಸಿ.ಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.