ಕಲಬುರಗಿ: ನಗರದ ಶರಣಬಸವೇಶ್ವರ ಸಂಸ್ಥಾನ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಿಂದ ಜಿಲ್ಲೆಯ ಪ್ರವಾಹ ಪೀಡಿತ ಕುಟುಂಬಗಳಿಗೆ ತುರ್ತು ಸಹಾಯ ಮಾಡಲು ₹10 ಲಕ್ಷಕ್ಕೂ ಅಧಿಕ ಮೌಲ್ಯದ ಪರಿಹಾರ ಸಾಮಗ್ರಿಗಳನ್ನು ರವಾನಿಸಿದೆ.
ಶರಣಬಸವೇಶ್ವರ ದೇವಾಲಯ ಆವರಣದಲ್ಲಿ ಬುಧವಾರ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಎಸ್. ಅಪ್ಪ, ಶರಣಬಸವ ವಿಶ್ವವಿದ್ಯಾಲಯ ಕುಲಾಧಿಪತಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಣಿ ಎಸ್. ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಪರಿಹಾರ ಸಾಮಗ್ರಿಗಳ ಸಾಗಿಸುವ ವಾಹನಗಳಿಗೆ ಹಸಿರು ನಿಶಾನೆ ತೋರಿ ವಸ್ತುಗಳನ್ನು ಪ್ರವಾಹ ಪೀಡಿತ ಗ್ರಾಮಗಳಿಗೆ ರವಾನಿಸಿದರು.
ಇದಕ್ಕೂ ಮುನ್ನ ದಾಕ್ಷಾಯಣಿ ಎಸ್. ಅಪ್ಪ ಮಾತನಾಡಿ, ‘ಸಂಸ್ಥಾನ ಪ್ರಕೃತಿ ವಿಕೋಪಗಳ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ನೆರವು ನೀಡುವ ಸಮೃದ್ಧ ಪರಂಪರೆ ಹೊಂದಿದೆ. ಭಾರಿ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಯ ಜನರಿಗೆ ಪರಿಹಾರ ಸಾಮಗ್ರಿಗಳನ್ನು ತಲುಪಿಸುವ ಮೂಲಕ ಸಹಾಯ ಹಸ್ತ ಚಾಚಲು ನಿರ್ಧರಿಸಿದೆ’ ಎಂದರು.
ಶರಣಬಸವ ವಿವಿಯ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ಡೀನ್ ಲಕ್ಷ್ಮಿ ಪಾಟೀಲ ಮಾಕಾ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸ್ಥಾನದ ಭವಾನಿ ಎಸ್. ಅಪ್ಪ, ಶಿವಾನಿ ಎಸ್. ಅಪ್ಪ, ಮಹೇಶ್ವರಿ ಎಸ್. ಅಪ್ಪ, ಕುಲಸಚಿವ (ಮೌಲ್ಯಮಾಪನ) ಎಸ್.ಎಚ್. ಹೊನ್ನಳ್ಳಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.