ADVERTISEMENT

ಗಾಣಗಾಪುರ ಅಭಿವೃದ್ಧಿಗೆ ₹ 10 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2019, 14:47 IST
Last Updated 21 ಅಕ್ಟೋಬರ್ 2019, 14:47 IST

ಕಲಬುರ್ಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸುಕ್ಷೇತ್ರ ದೇವಲ ಗಾಣಗಾಪುರ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹ 10 ಕೋಟಿ ಬಿಡುಗಡೆ ಮಾಡಿದೆ.

ಮಹಾರಾಷ್ಟ್ರ ಚುನಾವಣಾ ಪ್ರಚಾರ ಮುಗಿಸಿ ನಗರಕ್ಕೆ ಭೇಟಿ ನೀಡಿದ್ದ ವೇಳೆ ಅ 17ರಂದು ದತ್ತಾತ್ರೇಯ ದರ್ಶನ ಪಡೆದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕ್ಷೇತ್ರದ ಅಭಿವೃದ್ಧಿ ₹ 10 ಕೋಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಅ 18ರಂದೇ ಆರ್ಥಿಕ ಇಲಾಖೆಗೆ ಶಿಫಾರಸು ಮಾಡಿದ್ದರು. ಅದರಂತೆ ಆರ್ಥಿಕ ಇಲಾಖೆ ಹಣ ಬಿಡುಗಡೆಗೊಳಿಸಿ ಸೋಮವಾರ ಆದೇಶ ಹೊರಡಿಸಿದೆ.

ಈ ಹಣದಲ್ಲಿ ಗಾಣಗಾಪುರದ ಒಳಚರಂಡಿ ನಿರ್ಮಾಣ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿದಂತೆ ಇತರ ಕಾರ್ಯಗಳಿಗೆ ವಿನಿಯೋಗಿಸಲು ಉದ್ದೇಶಿಸಲಾಗಿದೆ. ದೇವಲ ಗಾಣಗಾಪುರಕ್ಕೆ ದೇಶ ಅದರಲ್ಲೂ ಮಹಾರಾಷ್ಟ್ರದಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.

ADVERTISEMENT

ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ‘ದತ್ತಾತ್ರೇಯ ಕ್ಷೇತ್ರದ ಅಭಿವೃದ್ಧಿಗೆಂದು ಕೇಳಲಾದ ಒಂದೇ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಣ ಬಿಡುಗಡೆ ಮಾಡಿದ್ದಾರೆ. ಈ ಅನುದಾನದಲ್ಲಿ ಒಳಚರಂಡಿ ಸುಧಾರಣೆ ಜತೆಗೆ ಚರಂಡಿ ನೀರು ನೇರವಾಗಿ ನದಿಗೆ ಸೇರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಸ್ಥಾಪಿಸಲಾಗುವುದು. ಪ್ರವಾಹ ಬಂದಾಗ ನದಿ ನೀರು ದತ್ತಾತ್ರೇಯ ದೇವಾಲಯಕ್ಕೆ ಬರದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.