ಕಲಬುರ್ಗಿ: ಕೋವಿಡ್–19 ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಕನಸಾದ ಸ್ವಚ್ಛ ಭಾರತ ಅಂಗವಾಗಿ ಪ್ರತಿಯೊಬ್ಬರು ಶ್ರಮದಾನ ಮಾಡುವ ಮೂಲಕ ಸ್ವಚ್ಛತೆಗೆ ಮಹತ್ವ ನೀಡಬೇಕು. ದೇಹ ದಂಡಿಸುವುದಲ್ಲದೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಹೇಳಿದರು.
ಮಹಾತ್ಮ ಗಾಂಧೀಜಿಯವರ 151ನೇ ಜಯಂತ್ಯುತ್ಸವ ಅಂಗವಾಗಿ ಕೋವಿಡ್–19 ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಡಿ.ಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸರಳವಾಗಿ ಆಯೋಜಿಸಿದ್ದ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಪ್ರೊಬೇಷನರ್ ಐಎಎಸ್ ಅಧಿಕಾರಿ ಡಾ.ಆಕಾಶ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಜನ್ಮ ದಿನವನ್ನು ವಿಶ್ವಸಂಸ್ಥೆ ವಿಶ್ವ ಅಹಿಂಸಾ ದಿನಾಚರಣೆಯಾಗಿ ಅಚರಿಸುತ್ತಿರುವುದು ನಾವೆಲ್ಲರು ಹೆಮ್ಮೆ ಪಡುವ ವಿಷಯವಾಗಿದೆ. ದೇಶದ ಪ್ರತಿ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಾಣುತ್ತೇವೆ. ಗಾಂಧೀಜಿಯವರನ್ನು ಆತ್ಮಸಾಕ್ಷಿಯಾಗಿ ನೋಡಿದರೆ ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ನೀತಿ ನಿಯಮಗಳಡಿ ನಡೆಯಲು ಬೋಧಿಸುತ್ತದೆ ಎಂದರು.
ಕೊರೊನಾ ವಾರಿಯರ್ಸ್ಗೆ ಸನ್ಮಾನ: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಅರೋಗ್ಯ ಮತ್ತು ವೈದ್ಯಕೀಯ ಇಲಾಖೆಯ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ಕೋವಿಡ್ ಶಿಷ್ಟಾಚಾರದಂತೆ ಅಂತ್ಯ ಸಂಸ್ಕಾರ ಮಾಡುವ ವಾಹನ ಚಾಲಕರು, ಸಹಾಯಕರು, ಗ್ರೂಪ್ 'ಡಿ' ಸಿಬ್ಬಂದಿ ಸೇರಿದಂತೆ 19 ಜನರಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ
ಗೌರವಿಸಲಾಯಿತು.
ಶ್ರಮದಾನ: ಕಾರ್ಯಕ್ರಮಕ್ಕೂ ಮುನ್ನ ಡಾ.ಶಂಕರ ವಣಿಕ್ಯಾಳ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಲೋಖಂಡೆ, ಡಿ.ಸಿ. ಕಚೇರಿಯ ಸಿಬ್ಬಂದಿ ಮಿನಿ ವಿಧಾನಸೌಧ ಅವರಣದಲ್ಲಿ ಶ್ರಮದಾನ
ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.