ADVERTISEMENT

ಗುತ್ತಿಗೆದಾರರು ದೂರಿದರೂ ಕ್ರಮ ಕೈಗೊಳ್ಳಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಕಿಡಿ

‘ರಾಜ್ಯದಲ್ಲಿ ಏನಾಗುತ್ತಿದೆ ಎಂದು ಮೋದಿ ನೋಡಲಿ’

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 12:53 IST
Last Updated 12 ಏಪ್ರಿಲ್ 2022, 12:53 IST
 ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಕಲಬುರಗಿ: ‘ರಾಜ್ಯ ಸರ್ಕಾರ ತಮ್ಮಿಂದ ಕಾಮಗಾರಿಗಳಲ್ಲಿ ಪರ್ಸೆಂಟೇಜ್ ಪಡೆಯುತ್ತಿದೆ ಎಂದು ಗುತ್ತಿಗೆದಾರರು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರವರೆಗೂ ದೂರು ನೀಡಿದರೂ, ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಬಳಿಕವಾದರೂ ರಾಜ್ಯದಲ್ಲಿ ಏನಾಗುತ್ತಿದೆ ಎಂಬುದನ್ನು ಪ್ರಧಾನಿ ನೋಡಲಿ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರ್ಸೆಂಟೇಜ್ ರಾಜಕಾರಣ ನಡೆಯುತ್ತಿದ್ದರೂ ಆ ಬಗ್ಗೆ ಗಮನ ಹರಿಸುವ ಬದಲು ತಾನು ಮಾಡಿದ್ದೇ ಸರಿ ಅನ್ನುವ ಭ್ರಮೆಯಲ್ಲಿದ್ದಾರೆ’ ಎಂದು ವ್ಯಂಗ್ಯವಾಡಿದರು.

‘ಪರ್ಸೆಂಟೇಜ್‌ಗೆ ನಲುಗಿ ಗುತ್ತಿಗೆದಾರರರು ನಲುಗಿ ಹೋಗಿದ್ದಾರೆ. ಡಬಲ್ ಎಂಜಿನ್ ಸರ್ಕಾರವೆಂದು ಹೇಳಿಕೊಂಡು ಜನರನ್ನು ಯಾಮಾರಿಸುತ್ತಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ಹಾಳು ಮಾಡುತ್ತಿದೆ. ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದರೂ ಕ್ರಮ ಕೈಗೊಳ್ಳಲಿಲ್ಲ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಬಂದಾಗ, ಹೀಗಾದರೆ ಸರ್ಕಾರಕ್ಕೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ ಕಡಿವಾಣ ಹಾಕಿ ಎಂದು ಸೂಚನೆ ಹೇಳಿದ್ದೆ’ ಎಂದರು.

ADVERTISEMENT

ಸರ್ಕಾರದ ಪರ್ಸೆಂಟೇಜ್ ಹೊಡೆತದಿಂದ ಗುತ್ತಿಗೆದಾರರರು ಬೇಸತ್ತು ಹೋಗಿದ್ದಾರೆ. ಹೀಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರ್ಸೆಂಟೇಜ್‌ಗೆ ಹೇಗೆ ಕಡಿವಾಣ ಹಾಕಬೇಕು ಅಂತ ವಿಚಾರ ಮಾಡಲಿಲ್ಲ. ಈಗಲಾದರೂ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಆತ್ಮಹತ್ಯೆ ಪ್ರಕರಣ ಕುರಿತಂತೆ ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ತಮ್ಮನ್ನು ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆಗೆ ಒಳಪಡಿಸಿದ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಖರ್ಗೆ, ‘ಇದು ನಮ್ಮ ಪಕ್ಷದ ಆಂತರಿಕ ವಿಚಾರ. ಹೀಗಾಗಿ, ಇಲ್ಲಿ ಮಾತನಾಡಲಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.