ಕಲಬುರ್ಗಿ: ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ ಅವರನ್ನು ಹತ್ಯೆ ಮಾಡಿದ ವ್ಯಕ್ತಿಯ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಬಂಗಾರಪೇಟೆ ತಾಲ್ಲೂಕಿನ ತೊಪ್ಪನಳ್ಳಿಯಲ್ಲಿ ರಾಮಮೂರ್ತಿ ಹಾಗೂ ವೇಂಕಟಪತಿ ಅವರ ಮಧ್ಯೆ ಜಮೀನು ವ್ಯಾಜ್ಯ ಇದ್ದು, ಇದರ ಜಂಟಿ ಸರ್ವೆ ಕಾರ್ಯಕ್ಕೆ ತೆರಳಿದ ಸಂದರ್ಭದಲ್ಲಿ ಆರೋಪಿ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಪೊಲೀಸರ ಮುಂದೆಯೇ ಈ ಕೃತ್ಯ ನಡೆದಿದ್ದು ಅತ್ಯಂತ ಕಳವಳಕಾರಿ ಎಂದು ನೌಕರರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ನೌಕರರ ಮೇಲೆ ರಾಜ್ಯದಲ್ಲಿ ಇಂಥ ಹಲ್ಲೆ, ಕೊಲೆ ಕೃತ್ಯಗಳು ಪದೇ ಪದೇ ನಡೆಯುತ್ತಲೇ ಇವೆ. ಅದರಲ್ಲೂ ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಭೂ ಮಾಪನಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವುದೇ ಕಠಿಣವಾಗಿದೆ. ಭಯದಲ್ಲೇ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಈ ಪರಿಸ್ಥಿತಿ ಸರಿ ಮಾಡಲು ಸೂಕ್ತ ಕಾನೂನು ರೂಪಿಸಬೇಕು. ಸರ್ಕಾರಿ ನೌಕರರಿಗೆ ರಕ್ಷಣೆ ಒದಗಿಸಬೇಕು ಎಂದೂ ಆಗ್ರಹಿಸಿದರು.
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು, ಅವರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಬೇಕು. ಆರ್ಥಿಕ ಸೌಕರ್ಯಗಳನ್ನು ಕೂಡಲೇ ಮಂಜೂರು ಮಾಡಬೇಕು ಎಂದೂ ಮನವಿ ಮಾಡಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಲೇಂಗಟಿ ನೇತೃತ್ವದಲ್ಲಿ ವಿವಿಧ ಇಲಾಖೆಗಳ ನೌಕರರು ಪಾಲ್ಗೊಂಡಿದ್ದರು. ಒಂದು ನಿಮಿಷ ಮೌನ ಆಚರಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.