ADVERTISEMENT

ಗ್ರಾಮ ಪಂಚಾಯಿತಿ ಕೆಲಸಗಳು ಬಂದ್, ತಾಲ್ಲೂಕು ಪಂಚಾಯಿತಿ ಅಧಿಕಾರಿ ಹಸ್ತಕ್ಷೇಪ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 6:19 IST
Last Updated 21 ಫೆಬ್ರುವರಿ 2022, 6:19 IST

ಚಿತ್ತಾಪುರ: ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೊಗಲಾ ಗ್ರಾ.ಪಂ ಆಡಳಿತದಲ್ಲಿ ನೇರವಾಗಿ ಹಸ್ತಕ್ಷೇಪ ಮಾಡಿ ಪಂಚಾಯಿತಿಯ ಎಲ್ಲಾ ಯೋಜನೆಗಳ ಕೆಲಸ ಕಾರ್ಯಗಳು ಬಂದ್ ಮಾಡಿರುವ ಪ್ರಕರಣ ತಡವಾಗಿ ಬೆಳೆಕಿಗೆ ಬಂದಿದೆ.

ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ತೊಂದರೆ ಕೊಡುತ್ತಿದ್ದಾರೆ. ಅಭಿವೃದ್ಧಿ ಕಾಮಗಾರಿ ತಡೆಹಿಡಿದಿದ್ದಾರೆ. ಯೋಜನೆಗಳನ್ನು ಲಾಕ್ ಮಾಡಿ, ಪಂಚಾಯಿತಿ ವ್ಯಾಪ್ತಿಯ ಗ್ರಾಮ ಮತ್ತು ತಾಂಡಾಗಳಲ್ಲಿ ಯಾವುದೇ ರೀತಿಯ ಕೆಲಸಗಳು, ಖರ್ಚುವೆಚ್ಚ ಮಾಡದಂತೆ ಪಿಡಿಓ ಅವರಿಗೆ ತಾಕೀತು ಮಾಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ತಮ್ಮಣ್ಣ ಡಿಗ್ಗಿ ಫೆ.3 ರಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಪತ್ರ ಬರೆದಿದ್ದಾರೆ.

ನರೇಗಾ, ರಾಜೀವಗಾಂಧಿ ಸೇವಾ ಕೇಂದ್ರ, ಗ್ರಾಮಪಂಚಾಯಿತಿ ಕಟ್ಟಡ ನಿರ್ಮಾಣ, ಕಸ ವಿಲೇವಾರಿ ಘಟಕ ಕಟ್ಟಡ ನಿರ್ಮಾಣ ಕೆಲಸ ಮಾಡದಂತೆ ತಡೆಹಿಡಿದಿದ್ದಾರೆ. ಸದಸ್ಯರಿಗೆ ಗೌರವ ಧನ ಕೊಡದಂತೆ, ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿಗೆ ಅನುಮೋದನೆ ಮಾಡದಂತೆ ತಡೆ ಹಿಡಿದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಓರಿಯೆಂಟ್ ಸಿಮೆಂಟ್ ಕಂಪನಿ ಪಂಚಾಯಿತಿಗೆ ಪಾವತಿಸಿದ ₹75 ಲಕ್ಷ ತೆರಿಗೆ ಹಣ ಬ್ಯಾಂಕಿನಲ್ಲಿ ಠೇವಣಿ ಇಡುವಂತೆ ಒತ್ತಾಯಿಸುತ್ತಿದ್ದಾರೆ. ಕಳೆದ 6 ತಿಂಗಳಿನಿಂದ 15ನೇ ಹಣಕಾಸು ಯೋಜನೆಯ ಕ್ರಿಯಾ ಯೋಜನೆಗೆ ಅನುಮೋದನೆ ನೀಡದೆ ತಡೆ ಹಿಡಿದಿದ್ದಾರೆ. ಗ್ರಾಮ ಪಂಚಾಯಿತಿಗೆ ಬರುವ ಯಾವುದೇ ಅನುದಾನ ಬಳಸಿ ಕೆಲಸ ಮಾಡದಂತೆ ಪಿಡಿಒ ಅವರಿಗೆ ಸೂಚಿಸಿದ್ದಾರೆ ಎಂದು ದೂರು ನೀಡಿದ್ದಾರೆ.

ಓರಿಯೆಂಟ್ ಸಿಮೆಂಟ್ ಕಂಪನಿ ಆಡಳಿತ ಸಿ.ಎಸ್.ಆರ್ ಯೋಜನೆಯಡಿ ಸಮುದಾಯ ಭವನ ಕಟ್ಟಡ ನಿರ್ಮಾಣ ಮಾಡಲು ಅಧಿಕಾರಿ ಸಹಕಾರ ನೀಡುತ್ತಿಲ್ಲ. ನರೇಗಾ ಯೋಜನೆ ಬಂದ್ ಮಾಡಿಸಿ ದುಡಿಯುವ ಕೂಲಿಕಾರ್ಮಿಕರ ಕೆಲಸ ಕಸಿದುಕೊಂಡು ಕಾರ್ಮಿಕರಿಗೆ ವಂಚಿಸುತ್ತಿದ್ದಾರೆ. ತೆರಿಗೆ ಹಣ ಬ್ಯಾಂಕಿನಲ್ಲಿಟ್ಟು, ಎಲ್ಲಾ ಯೋಜನೆ ಬಂದ್ ಮಾಡಿದರೆ ಕೆಲಸಗಳು ಮಾಡುವುದು ಹೇಗೆ ಎಂದು ಅವರು ಜಿಲ್ಲಾ ಪಂಚಾಯಿತಿ ಅಧಿಕಾರಿ ಮುಂದೆ ತಮ್ಮ ಅಳಲುತೋಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.