ADVERTISEMENT

ಭ್ರಷ್ಟರನ್ನು ಜೈಲಿಗಟ್ಟಲು ಸಹಕರಿಸಿ: ಮೇಘಣ್ಣವರ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 17:06 IST
Last Updated 27 ಅಕ್ಟೋಬರ್ 2020, 17:06 IST
ಮಹೇಶ್ ಮೇಘಣ್ಣವರ
ಮಹೇಶ್ ಮೇಘಣ್ಣವರ   

ಕಲಬುರ್ಗಿ: ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅ. 27ರಿಂದ ನ. 5ವರೆಗೆ ಜಿಲ್ಲೆಯ ವಿವಿಧೆಡೆ ಜಾಗೃತಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಭ್ರಷ್ಟರನ್ನು ಹಿಡಿಯಲು ಜಿಲ್ಲೆಯ ಜನ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದು ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಮಹೇಶ ಮೇಘಣ್ಣವರ ತಿಳಿಸಿದರು.

‘ಜಿಲ್ಲೆಯ ಎಲ್ಲ ತಾಲ್ಲೂಕು ಪಂಚಾಯಿತಿ, ಕೆಲ ತಹಶೀಲ್ದಾರ್‌ ಕಚೇರಿ ಹಾಗೂ ಬಸ್‌ ನಿಲ್ದಾಣದಂಥ ಜನನಿಬಿಡ ಪ್ರದೇಶಗಳಲ್ಲಿ ಈ ಅರಿವು ಕಾರ್ಯಕ್ರಮ ಯೋಜಿಸಲಾಗುತ್ತಿದೆ’ ಎಂದು ಅವರು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪ್ರಸಕ್ತ ವರ್ಷದಲ್ಲಿ 9 ಭ್ರಷ್ಟಾಚಾರ ಪ್ರಕರಣಗಳನ್ನು ಟ್ರ್ಯಾಪ್ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಪ್ರವೃತ್ತ ಆಗಲು ಸಿದ್ಧತೆ ಮಾಡಿಕೊಂಡಿದ್ದೇವೆ. ಅಧಿಕಾರಿಗಳು ಲಂಚ ಪಡೆಯುತ್ತಿರುವುದಕ್ಕೆ ಪೂರಕ ದಾಖಲಾತಿಗಳನ್ನು ಸಂಗ್ರಹಿಸಿ ಮಾಹಿತಿ ನೀಡಿದರೆ, ಕ್ರಮ ಕೈಗೊಳ್ಳಲಾಗುವುದು’ ಎಂದರು.

ADVERTISEMENT

‘ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿ ಸಿಕ್ಕಬಿದ್ದ ತಕ್ಷಣ ಜೈಲಿಗೆ ಅಟ್ಟಲಾಗುತ್ತದೆ. ಅವರಿಗೆ ಬೇಲ್‌ ನೀಡುವುದು, ಅಮಾನತು, ವಜಾ ಮುಂತಾದವನ್ನು ನ್ಯಾಯಾಧೀಶರು ನಿರ್ಧರಿಸುತ್ತಾರೆ. ಆದರೆ, ಪ್ರಾಮಾಣಿಕ ಅಧಿಕಾರಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸುವುದೂ ಮುಖ್ಯವಾಗಿದೆ’ ಎಂದು ಹೇಳಿದರು.

ಡಿಎಸ್‍ಪಿ ವೀರೇಶ್‌ ಮಾತನಾಡಿ, ‘ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜಾಥಾ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗುತ್ತಿದ್ದು, ಈ ವರ್ಷ ಕೋವಿಡ್-19 ಹಿನ್ನೆಲೆಯಲ್ಲಿ ಯಾವುದೇ ಜಾಥಾ ಮತ್ತು ಪ್ರಬಂಧ ಸ್ಪರ್ಧೆ ಆಯೋಜಿಸಿರುವುದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.