ADVERTISEMENT

ಜಾತಿ ನಿಂದನೆ: ದೂರುದಾರರಿಗೆ ಉಚಿತ ಕಾನೂನು ಸೇವೆಗೆ ಸೂಚನೆ

ಹೈಕೋರ್ಟ್‌ ಕಲಬುರ್ಗಿ ಪೀಠದಿಂದ ಆದೇಶ

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 8:58 IST
Last Updated 22 ಜುಲೈ 2020, 8:58 IST

ಕಲಬುರ್ಗಿ: ಜಾತಿ ನಿಂದನೆ ಪ್ರಕರಣಗಳಲ್ಲಿ ದೌರ್ಜನ್ಯಕ್ಕೊಳಗಾದ ವ್ಯಕ್ತಿಗಳಿಗೆ ಕಾನೂನು ಸೇವಾ ಪ್ರಾಧಿಕಾರಗಳು ಉಚಿತ ಕಾನೂನು ಸೇವೆ ಒದಗಿಸಬೇಕು. ಅಗತ್ಯಬಿದ್ದರೆ ವಕೀಲರನ್ನೂ ನೇಮಿಸಬೇಕು ಎಂದು ಸೂಚಿಸಿ ಕರ್ನಾಟಕ ಹೈಕೋರ್ಟ್‌ನ ಕಲಬುರ್ಗಿ ಪೀಠವು ಮಂಗಳವಾರ ತೀರ್ಪು ನೀಡಿದೆ.

ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕು ಇಬ್ರಾಹಿಂಪುರದ ಮರೆಣ್ಣ ಮಲ್ಲಪ್ಪ ಪೂಜಾರಿ ಎಂಬುವವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ‌ ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್‌ ಅವರಿದ್ದ ಪೀಠವು ಅರ್ಜಿ ತಿರಸ್ಕರಿಸಿತು.

‘ವಿಚಾರಣೆಯ ಪ್ರತಿ ಹಂತವೂ ದೂರುದಾರರನ್ನು ಒಳಗೊಳ್ಳಬೇಕು. ರಾಜೂ ಅಲಿಯಾಸ್‌ ರಮಾಕಾಂತ್ ಮತ್ತು ಮಧ್ಯಪ್ರದೇಶ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇದನ್ನು ಸ್ಪಷ್ಟವಾಗಿ ಹೇಳಿದೆ. ದೂರುದಾರರಿಗೂನೋಟಿಸ್‌ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ತಿಳಿಸಬೇಕು. ಇದು ಕಾನೂನು ಸೇವಾ ಪ್ರಾಧಿಕಾರಗಳ ಕರ್ತವ್ಯ. ಉಚಿತ ಕಾನೂನು ಸೇವೆ ನೀಡುವುದರ ಜೊತೆಗೆ ಪ್ರಕರಣ ಇತ್ಯರ್ಥವಾಗುವವರೆಗೂ ವಕೀಲರನ್ನೂ ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಪೀಠ ನಿರ್ದೇಶನ ನೀಡಿತು.

ADVERTISEMENT

ಜಾತಿ ನಿಂದನೆ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯಗಳು, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಹೈಕೋರ್ಟ್‌ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಜಿಲ್ಲೆಗಳ ಕಾನೂನು ಸೇವಾ ಪ್ರಾಧಿಕಾರಗಳಿಗೆ ಈ ಆದೇಶದ ಪ್ರತಿಯನ್ನು ಕಳುಹಿಸಿಕೊಡಬೇಕು ಎಂದೂ ಪೀಠವು ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರಿಗೆ ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.