ಕಲಬುರ್ಗಿ: ‘ಸಂಸದರಿಗೆ ವೈಯಕ್ತಿಕವಾಗಿ ಐಫೋನ್ ಮತ್ತು ಲೆದರ್ ಬ್ಯಾಗ್ ಕೊಟ್ಟಿರುವುದಾಗಿ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಆದರೆ ಬಿಜೆಪಿ ಈ ಬಗ್ಗೆ ಏಕೆ ವಿವಾದ ಸೃಷ್ಟಿಸುತ್ತಿದೆಯೋ ಗೊತ್ತಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಐಫೋನ್ ಮತ್ತು ಲೆದರ್ ಬ್ಯಾಗ್ ಅನ್ನು ಸರ್ಕಾರದ ಹಣದಲ್ಲಿ ಕೊಟ್ಟಿಲ್ಲ. ಬಿಜೆಪಿಯವರು ವಿನಾಕಾರಣ ಈ ವಿಷಯವನ್ನು ದೊಡ್ಡದು ಮಾಡುತ್ತಿದ್ದಾರೆ’ ಎಂದರು.
‘ಜೆಡಿಎಸ್ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಕಣ್ಣೀರು ಹಾಕಿಲ್ಲವೇ’ ಎಂದು ಪ್ರಶ್ನಿಸಿದರು.
‘ಜಿಲ್ಲಾ ಉಸ್ತುವಾರಿ ಹಂಚಿಕೆ ವಿಚಾರ ಹೈಕಮಾಂಡ್ಗೆ ಬಿಟ್ಟದ್ದು. ನಾನು ಹೈಕಮಾಂಡ್ನ ಆಜ್ಞಾಧಾರಕ. ಈ ಬಗ್ಗೆ ಈಗಾಗಲೇ ಚರ್ಚೆಯಾಗಿದ್ದು, ಇನ್ನೊಂದು ತಿಂಗಳಲ್ಲಿ ಹಂಚಿಕೆಯಾಗಲಿದೆ’ ಎಂದರು.
‘ಖಾಸಗಿ ವಸತಿ ನಿಲಯಗಳ ಬಗ್ಗೆ ಅಧ್ಯಯನ ನಡೆಸಲು ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಆಳ್ವಾಸ್, ರಾಮಕೃಷ್ಣ ಆಶ್ರಮದಂತಹ ಖಾಸಗಿ ವಸತಿ ನಿಲಯಗಳಿಗೆ ಭೇಟಿ ನೀಡಲಿರುವ ತಂಡ, ಅವುಗಳ ಕಾರ್ಯ ನಿರ್ವಹಣೆ ಬಗ್ಗೆ ವರದಿ ಕೊಡಲಿದೆ. ವರದಿ ಕೈಸೇರಿದ ತಿಂಗಳಲ್ಲಿ ಸರ್ಕಾರಿ ಹಾಸ್ಟೆಲ್ಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು’ ಎಂದು ತಿಳಿಸಿದರು.
‘ಸಮಾಜ ಕಲ್ಯಾಣ ಇಲಾಖೆಯಡಿ 3,500 ಹಾಸ್ಟೆಲ್ಗಳಿದ್ದು, ಅವುಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು. ಹಾಸ್ಟೆಲ್ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.