ADVERTISEMENT

100 ವಿದ್ಯಾರ್ಥಿಗಳಿಗೆ ಐಎಎಸ್‌ ತರಬೇತಿ

ಶರಣಬಸವೇಶ್ವರ ವಿದ್ಯಾವರ್ಧಕ ಸಂಘ, ಸಾಧನಾ ಕೋಚಿಂಗ್ ಸೆಂಟರ್ ಸಹಯೋಗ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 3:16 IST
Last Updated 24 ಫೆಬ್ರುವರಿ 2021, 3:16 IST
ಡಾ.ಶರಣಬಸವಪ್ಪ ಅಪ್ಪ
ಡಾ.ಶರಣಬಸವಪ್ಪ ಅಪ್ಪ   

ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪುರ್ವಭಾವಿ ತರಬೇತಿ ನೀಡಲು ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ಬೆಂಗಳೂರಿನ ಸಾಧನಾ ಕೋಚಿಂಗ್ ಸೆಂಟರ್ ಸಹಯೋಗದಲ್ಲಿ ನಗರದ ಶರಣಬಸವೇಶ್ವರ ವಿದ್ಯಾಸಂಸ್ಥೆಯ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ತರಬೇತಿ ಆರಂಭಿಸಲಿದೆ ಎಂದು ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಶರಣಬಸವಪ್ಪ ಅಪ್ಪ ತಿಳಿಸಿದರು.

‘ಸಂಸ್ಥೆಯ 100 ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗು ವುದು. ಬೇರೆ ಜಿಲ್ಲೆಗಳಿಂದ ಇಲ್ಲಿ ತರಬೇತಿ ಪಡೆಯಲು ಬರುವವರಿಗೆ

₹ 5 ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆಯನ್ನೂ ಮಾಡಲಾಗುವುದು. ಒಟ್ಟಾರೆ ಈ ಭಾಗದಿಂದ ಹೆಚ್ಚು ವಿದ್ಯಾರ್ಥಿಗಳು ಐಎಎಸ್‌, ಐಪಿಎಸ್‌, ಕೆಎಎಸ್‌ ಹುದ್ದೆಗಳನ್ನು ಪಡೆಯಬೇಕು ಎಂಬುದು ನಮ್ಮ ಆಸೆ’ ಎಂದು ತಿಳಿಸಿದರು.

ADVERTISEMENT

‘ನಮ್ಮ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ಹಲವರು ಐಎಎಸ್‌, ಕೆಎಎಸ್ ಅಧಿಕಾರಿಗಳಾಗಿದ್ದಾರೆ. ಅವರು ಸ್ವಂತ ಪರಿಶ್ರಮದ ಮೇಲೆ ಉನ್ನತ ಹುದ್ದೆಯನ್ನು ಪಡೆದಿದ್ದಾರೆ. ಅದಕ್ಕೆ ಪೂರಕವಾಗಿ ತರಬೇತಿಯನ್ನೂ ಇಲ್ಲೇ ಕೊಡುವಂತಾದರೆ ಹೆಚ್ಚು ಜನ ಸ್ಪರ್ಧಾತ್ಮಕ ಪರೀಕ್ಷೆಯನ್ನು ಪಾಸು ಮಾಡಲಿದ್ದಾರೆ ಎಂಬ ಉದ್ದೇಶದಿಂದ ನಮ್ಮ ವಿಶ್ವವಿದ್ಯಾಲಯದ ಆವರಣದಲ್ಲಿ ತರಬೇತಿ ಕೇಂದ್ರವನ್ನು ಆರಂಭಿಸುತ್ತಿದ್ದೇವೆ’ ಎಂದು ಅವರು ಮಾಹಿತಿ ನೀಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ದಾಕ್ಷಾಯಣಿ ಎಸ್. ಅಪ್ಪ ಮಾತನಾಡಿ, ’ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗಷ್ಟೇ ಅಲ್ಲ. ಎಸ್ಸೆಸ್ಸೆಲ್ಸಿ ಹಾಗೂ ನಂತರ ಉನ್ನತ ವ್ಯಾಸಂಗ ಪಡೆಯುತ್ತಿರುವ ಎಲ್ಲ ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು. ನಮ್ಮ ಸಂಸ್ಥೆಯ 100 ವಿದ್ಯಾರ್ಥಿಗಳಿಗೆ ಪರೀಕ್ಷೆ ಮೂಲಕ ಆಯ್ಕೆ ಮಾಡಿ ಅವರಿಗೆ ಉಚಿತ ತರಬೇತಿ ಕೊಡಿಸುತ್ತೇವೆ’ ಎಂದರು.

ಸಾಧನಾ ಕೋಚಿಂಗ್ ಸೆಂಟರ್ ಮುಖ್ಯಸ್ಥೆ ಡಾ. ಜ್ಯೋತಿ, ‘ಡಾ. ಶರಣಬಸವಪ್ಪ ಅಪ್ಪ ಅವರ ಒತ್ತಾಸೆಯ ಮೇರೆಗೆ ಇಲ್ಲಿ ಸಂಸ್ಥೆಯ ತರಬೇತಿ ಆರಂಭಗೊಳ್ಳುತ್ತಿದೆ. ಇದು 6ರಿಂದ 7 ತಿಂಗಳ ಕೋರ್ಸ್ ಆಗಿದ್ದು, ವಾರದಲ್ಲಿ ಇಬ್ಬರು ನುರಿತ ತಜ್ಞರು ವಿವಿಧ ವಿಷಯಗಳ ತರಬೇತಿ ನೀಡುವರು. ತಿಂಗಳಿಗೊಮ್ಮೆ ಐಎಎಸ್‌, ಐಪಿಎಸ್‌ ಅಧಿಕಾರಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು. ಶರಣಬಸವೇಶ್ವರ ಶಿಕ್ಷಣ ಸಂಸ್ಥೆಗಳ 100 ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳಿಗೆ ₹ 12 ಸಾವಿರ ಶುಲ್ಕ ನಿಗದಿ ಮಾಡಲಾಗಿದೆ. ಬೇರೆ ವಿದ್ಯಾರ್ಥಿಗಳಿಗೆ ₹ 15 ಸಾವಿರ ನಿಗದಿಪಡಿಸಲಾಗಿದೆ’ ಎಂದು ಹೇಳಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶರಣಬಸವ ವಿ.ವಿ. ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ವಂದಿಸಿದರು. ವಿ.ವಿ. ಕುಲಸಚಿವ ಡಾ. ಅನೀಲಕುಮಾರ ಜಿ. ಬಿಡವೆ, ಡೀನ್ ಡಾ. ಲಕ್ಷ್ಮಿ ಪಾಟೀಲ ಮಾಕಾ, ಡಾ. ನೀಲಾಂಬಿಕಾ ಶೇರಿಕಾರ,
ಡಾ. ಮಲ್ಲಿಕಾರ್ಜುನ ಹುಗ್ಗಿ, ಪ್ರೊ. ಚವ್ಹಾಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.