ಚಿತ್ತಾಪುರ: ತಾಲ್ಲೂಕಿನ ಭಾಗೋಡಿ ಗ್ರಾಮದ ಹತ್ತಿರ ಕಾಗಿಣಾ ನದಿಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿರುವ ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ತಂಡ ಐದು ಟ್ರ್ಯಾಕ್ಟರ್ ವಶಕ್ಕೆ ಪಡೆದಿರುವ ಪ್ರಕರಣ ಶುಕ್ರವಾರ ಮಧ್ಯರಾತ್ರಿ ಜರುಗಿದೆ.
ಸಂಬಂಧಿತ ಪ್ರಾಧಿಕಾರದಿಂದ ಅನುಮತಿ ಇಲ್ಲದೆ ನದಿಯಿಂದ ಮರಳು ಎತ್ತಿ ದಾಸ್ತಾನು ಮಾಡಿಕೊಂಡು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರು ಮಾಡಬೂಳ ಪೊಲೀಸರ ನೆರವಿನಿಂದ ಮರಳು ಸಾಗಾಟ ಅಡ್ಡೆಯ ಮೇಲೆ ದಾಳಿ ಮಾಡಿದಾಗ ಐದು ಟ್ರ್ಯಾಕ್ಟರ್ ಜಪ್ತಿ ಮಾಡಿಕೊಂಡಿದ್ದಾರೆ.
ಅಧಿಕಾರಿಗಳ ಕಾರುಗಳು, ಜೀಪುಗಳು ಹೋಗದ ಕಡಿದಾದ ದಾರಿಯಲ್ಲಿ ಮಧ್ಯರಾತ್ರಿ ಒಂದು ಕಿ.ಮೀ ದೂರದವರೆಗೆ ನಡೆದುಕೊಂಡು ಹೋಗಿ ಮರಳು ದಾಸ್ತಾನು ಮತ್ತು ಸಾಗಾಟ ಅಡ್ಡೆ ಮೇಲೆ ದಾಳಿ ಮಾಡಲಾಗಿದೆ. ಮರಳು ಸಾಗಾಟ ಮಾಡುವ ಐದು ಟ್ರ್ಯಾಕ್ಟರ್ ಜಪ್ತಿ ಮಾಡಲಾಗಿದೆ. ಇನ್ನು ಕೆಲವು ಟ್ರ್ಯಾಕ್ಟರ್ ಕತ್ತಲಲ್ಲಿ ಮರೆಯಾದವು ಎಂದು ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರು ತಿಳಿಸಿದ್ದಾರೆ.
ವಶಕ್ಕೆ ಪಡೆದ ಟ್ರ್ಯಾಕ್ಟರ್ ಮಾಡಬೂಳ ಪೊಲೀಸ್ ಠಾಣೆಯ ಪಿಎಸ್ಐ ವಿಜಯಕುಮಾರ ಅವರಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಒಪ್ಪಿಸಲಾಗಿದೆ. ಮುಂದಿನ ಕ್ರಮ ಜರುಗಿಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.