ಕಲಬುರ್ಗಿ: ‘ದೇವದುರ್ಗ, ಶಹಾಪುರ, ಜೇವರ್ಗಿ ಕಡೆಯಿಂದ ನಗರಕ್ಕೆ ಬರುವ ಅನಧಿಕೃತ ಮರಳು ಲಾರಿಗಳನ್ನು ತಡೆಗಟ್ಟಲು ಮೂರು ದಿನಗಳೊಳಗೆ ಕಟ್ಟಿಸಂಗಾವಿ ಹತ್ತಿರ ಚೆಕ್ಪೋಸ್ಟ್ ನಿರ್ಮಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘ಅನಧಿಕೃತವಾಗಿ ಸಾಗಣೆ ಮಾಡುವ ಮರಳನ್ನು ಲೋಕೋಪಯೋಗಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆಯಬೇಕು. ಅದನ್ನು ಸರ್ಕಾರಿ ಕೆಲಸಗಳಿಗೆ ಬಳಸಿಕೊಳ್ಳಬೇಕು. ಮರಳು ಕೊರತೆಯಿಂದ ಯಾವುದೇ ಕಾಮಗಾರಿಗಳು ಕುಂಠಿತಗೊಳ್ಳದಂತೆ ನೋಡಿಕೊಳ್ಳಬೇಕು’ ಎಂದರು.
‘ಅಕ್ರಮವಾಗಿ ಮರಳು ಸಾಗಿಸುವ ವಾಹನಗಳ ಬಗ್ಗೆ ಪೊಲೀಸ್ ಹಾಗೂ ತಹಶೀಲ್ದಾರರು ಪ್ರಾದೇಶಿಕ ಸಾರಿಗೆ ಇಲಾಖೆಗೆ ಮಾಹಿತಿ ನೀಡಬೇಕು. ಸಾರಿಗೆ ಅಧಿಕಾರಿಗಳು ವಾಹನಗಳ ರಹದಾರಿ ರದ್ದುಗೊಳಿಸಬೇಕು ಮತ್ತು ವಾಹನವನ್ನು ವಶಕ್ಕೆ ಪಡೆಯಬೇಕು’ ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಮಾತನಾಡಿ, ‘ಕಟ್ಟಿಸಂಗಾವಿ ಬಳಿ ಸ್ಥಾಪಿಸುವ ಚೆಕ್ ಪೋಸ್ಟ್ನಲ್ಲಿ 8 ಗಂಟೆ ಸರದಿ ಮೇಲೆ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು. ತಂತ್ರಜ್ಞಾನವನ್ನು ಬಳಿಸಿಕೊಂಡು ಅಧಿಕೃತ ಮತ್ತು ಅನಧಿಕೃತ ವಾಹನಗಳ ಗುರುತು ಹಚ್ಚಲಾಗುವುದು’ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ., ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಉಪ ವಿಭಾಗಾಧಿಕಾರಿಗಳಾದ ಡಾ. ಸುಶೀಲಾ ಬಿ., ರಾಚಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.