ADVERTISEMENT

ಪೂರ್ವಭಾವಿ ಸಭೆ: ಸ್ವಾತಂತ್ರ್ಯೋತ್ಸವಕ್ಕೆ ಶಾಲಾಮಕ್ಕಳು ಬೇಡ; ಜಿಲ್ಲಾಧಿಕಾರಿ ಸೂಚನೆ

ಕೋವಿಡ್‌ ನಿಯಂತ್ರಣ ಜಾಗೃತಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2020, 9:42 IST
Last Updated 8 ಆಗಸ್ಟ್ 2020, 9:42 IST
ಕಲಬುರ್ಗಿಯಲ್ಲಿ ಶನಿವಾರ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡರು
ಕಲಬುರ್ಗಿಯಲ್ಲಿ ಶನಿವಾರ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡರು   

ಕಲಬುರ್ಗಿ: ‘ಕೋವಿಡ್-19 ಸೋಂಕಿನ ಹೆಚ್ಚಾಗಿರುವ ಕಾರಣ ಈ ಬಾರಿಯ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಶಾಲಾ ಮಕ್ಕಳನ್ನು ಕರೆತರಬಾರದು. ಬರುವವರೆಲ್ಲರೂ ಮಾಸ್ಕ್‌, ಹ್ಯಾಂಡ್‌ಸ್ಯಾನಿಟೈಸರ್‌ ಹಾಗೂ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಶರತ್‌ ಸೂಚಿಸಿದರು.

ನಗರದಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಆ. 15ರಂದು ಈ ಸಮಾರಂಭವನ್ನು ಹೆಚ್ಚು ಜಾಗರೂಕತೆಯಿಂದ ನೆರವೇರಿಸಬೇಕು. ಯಾವುದೇ ಲೋಪಕ್ಕೂ ಅವಕಾಶ ನೀಡಕೂಡದರು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಮಾರಂಭದಲ್ಲಿ ಹೆಚ್ಚು ಜನರು ಸೇರಬಾರದು. ಮಾಸ್ಕ್ ಧರಿಸದವರನ್ನು ಸಮಾರಂಭದ ಕಡೆಗೆ ಇಡಬಾರದು. ಸ್ಥಳದಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಬೇಕು. ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಕೇಂದ್ರ ಗೃಹ ಮಂತ್ರಾಲಯ ನೀಡಿರುವ ನಿರ್ದೇಶನಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ತಿಳಿಸಿದರು.‌

ADVERTISEMENT

ಕೊರೊನಾ ವೈರಸ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಶಾಲಾ ಮಕ್ಕಳನ್ನು ಸಮಾರಂಭಕ್ಕೆ ಕರೆತರಬಾರದು. ಎನ್‍ಸಿಸಿ, ಸ್ಕೌಟ್ಸ್, ಹೋಂ ಗಾರ್ಡ್ ಹಾಗೂ ಪೊಲೀಸ್ ತಂಡಗಳ ಪಥಸಂಚನ ಮಾತ್ರ ನಡೆಸಬೇಕು. ಈ ಸಂಬಂಧ ಮೊದಲೇ ತಾಲೀಮು ಕೂಡ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಅವರು ಹೇಳಿದರು.

ಈ ಬಾರಿ ಕೋವಿಡ್-19 ಸಂಬಂಧಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸ್ತಬ್ಧಚಿತ್ರಗಳನ್ನು ತಯಾರಿಸಬೇಕು. ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ತಮ್ಮ ಇಲಾಖೆಗಳಲ್ಲಿ ಕೋವಿಡ್ ಸಂಬಂಧಿಸಿದ ಯೋಜನೆ/ ಕ್ರಮಗಳ ಕುರಿತ ಟ್ಯಾಬ್ಲೊ ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕೇಂದ್ರದಲ್ಲಿ ಎಲ್ಲಾ ಕಚೇರಿಗಳಲ್ಲಿ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಅಂದು ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ಮಾಡಬೇಕು. ನಂತರ ನಗರದ ಪೊಲೀಸ್ ಪರೇಡ್‌ ಮೈದಾನದಲ್ಲಿ ನಡೆಯುವ ಪ್ರಧಾನ ಕಾರ್ಯಕ್ರಮಕ್ಕೆ ಅಂದು ಬೆಳಿಗ್ಗೆ 8.30ರೊಳಗಾಗಿ ಬಂದು ಸೇರಬೇಕು. ಇಲ್ಲಿ ಸರಿಯಾಗಿ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು ಎಂದರು.

ಸನ್ಮಾನ: ಕೋವಿಡ್ ನಿಯಂತ್ರಣಕ್ಕೆ ದುಡಿಯುತ್ತಿರುವ ವೈದ್ಯರು, ನರ್ಸ್, ಪೌರಕಾರ್ಮಿಕರು ಹಾಗೂ ಸೋಂಕಿನಿಂದ ಗುಣಮುಖರಾದ ಕೆಲವು ರೋಗಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಈ ಕುರಿತು ಪಟ್ಟಿ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆಯಂದು ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಮಾರಾಟ ಮಾಡಿದಲ್ಲಿ ಅಂತಹ ಅಂಗಡಿಗಳನ್ನು ಲೈಸನ್ಸ್ ರದ್ದುಪಡಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು.‌

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪಿ.ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಮಿ ಮರಿಯಂ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ್ ವಣಿಕ್ಯಾಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.