
ಕಲಬುರಗಿ: ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಶೋಕ್ ಪಬ್ಬತಿ ಅವರ ಮೇಲ್ವಿಚಾರಣೆಯಲ್ಲಿ ಪಿಎಚ್.ಡಿ ಸಂಶೋಧನೆ ಮಾಡುತ್ತಿರುವ ವಿದ್ಯಾರ್ಥಿನಿ ಮಧುಷ್ಮಿತಾ ಹತಿಮುರಿಯಾ ಅವರನ್ನು 2026ರ ಮಾರ್ಚ್ 2ರಂದು ಜಪಾನ್ನಲ್ಲಿ ನಡೆಯಲಿರುವ ನೊಬೆಲ್ ಪ್ರಶಸ್ತಿ ವಿಜೇತರೊಂದಿಗಿನ ಪ್ರತಿಷ್ಠಿತ 17ನೇ ಹೋಪ್ ಸಮ್ಮೇಳನದಲ್ಲಿ ಭಾಗವಹಿಸಲು ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಾಮನಿರ್ದೇಶನ ಮಾಡಿದೆ ಎಂದು ಡೀನ್ ಪ್ರೊ.ವೆಂಕಟರಮಣ ದೊಡ್ಡಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ‘ಜಪಾನ್ನ ತ್ಸುಕುಬಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ‘ಕೈಗಾರಿಕಾ ಅನ್ವಯಿಕೆಗಳಿಗೆ ಕಿಣ್ವ ಚಟುವಟಿಕೆಯನ್ನು ಹೆಚ್ಚಿಸುವ ಸುಸ್ಥಿರ ದ್ರಾವಕ ಎಂಜಿನಿಯರಿಂಗ್ ವಿಧಾನ’ಕ್ಕೆ ಸಂಬಂಧಿಸಿದ ತಮ್ಮ ಸಂಶೋಧನಾ ಪ್ರಬಂಧವನ್ನು ಮಂಡಿಸಲಿದ್ದಾರೆ. ದೇಶದ ಕೇವಲ ಹತ್ತು ವಿದ್ಯಾರ್ಥಿಗಳನ್ನು ಈ ಕಾರ್ಯಕ್ರಮಕ್ಕಾಗಿ ಭಾರತದ ಡಿಎಸ್ಟಿಯಿಂದ ನೇರವಾಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯ ಪ್ರಯಾಣದ ಖರ್ಚು ವೆಚ್ಚವನ್ನು ಭಾರತದ ಡಿಎಸ್ಟಿ ಮತ್ತು ಜಪಾನ್ ಸೊಸೈಟಿ ಫಾರ್ ದಿ ಪ್ರಮೋಷನ್ ಆಫ್ ಸೈನ್ಸ್ ಜಂಟಿಯಾಗಿ ಭರಿಸಲಿವೆ ಎಂದು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿನಿಗೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ, ಕುಲಸಚಿವ ಪ್ರೊ.ಆರ್.ಆರ್. ಬಿರಾದಾರ ಮತ್ತು ರಸಾಯನಶಾಸ್ತ್ರ ವಿಭಾಗದ ಅಧ್ಯಾಪಕರು ಶುಭ ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.