
ಕಲಬುರಗಿ: ‘ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಹಣಕಾಸು ಅವ್ಯವಹಾರದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಗುಲಬರ್ಗಾ ವಿವಿ ಉಳಿಸಿ ಹೋರಾಟ ಸಮಿತಿಯ ಸಂಚಾಲಕ ಎಂ.ಬಿ.ಸಜ್ಜನ ಒತ್ತಾಯಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಲ್ಕು ತಿಂಗಳ ಹಿಂದೆ ವಿಶ್ವವಿದ್ಯಾಲಯದ ಕುಲಸಚಿವರು, ವೇತನ ಬಟವಾಡೆ ವಿಷಯದಲ್ಲಿ ₹ 1 ಕೋಟಿ ಅವ್ಯವಹಾರವಾಗಿದೆ ಎಂದು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದರು. ಅದಾದ ಒಂದು ತಿಂಗಳ ಬಳಿಕ ನಮ್ಮ ಸಮಿತಿಯು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಲು ಪ್ರಕ್ರಿಯೆ ಪ್ರಾರಂಭಿಸುವಂತೆ ಒತ್ತಾಯಿಸಿತ್ತು’ ಎಂದು ಹೇಳಿದರು.
‘ಆದರೆ ಈವರೆಗೂ ತಪ್ಪಿತಸ್ಥನ ವಿರುದ್ಧ ವಿವಿಯಿಂದ ಯಾವುದೇ ಕ್ರಮವಾಗಿಲ್ಲ. ವಿಶ್ವಸನೀಯ ಮೂಲಗಳ ಪ್ರಕಾರ ವಿವಿ ಸಿಂಡಿಕೇಟ್ ತನಿಖಾ ಸಮಿತಿ ರಚಿಸಿದಾಗ ಆರೋಪಿಯು ಅವ್ಯವಹಾರ ನಡೆಸಿರುವುದು ಕಂಡುಬಂದಿದೆ. ಆದರೆ ತಪ್ಪಿತಸ್ಥನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ವಿವಿ ವಿಫಲವಾಗಿದೆ’ ಎಂದು ಆರೋಪಿಸಿದರು.
‘ಈ ಹಣಕಾಸು ಅವ್ಯವಹಾರದಲ್ಲಿ ಹಲವಾರು ಪ್ರಭಾವಿ ವ್ಯಕ್ತಿಗಳು, ವಿವಿಯ ನಿವೃತ್ತ ಅಧಿಕಾರಿಗಳು ಕೂಡ ಭಾಗಿಯಾರುವ ವದಂತಿಯಿದೆ. ಆದ್ದರಿಂದ ಈ ಹಗರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ’ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರದೀಪ, ನಾಗಯ್ಯಸ್ವಾಮಿ, ಶೇಖಮ್ಮ ಕುರಿ ಇದ್ದರು.
‘ಸೆಟ್ಲೈಟ್ ಬಸ್ ನಿಲ್ದಾಣಕ್ಕೆ ಜಾಗ ಬೇಡ’
‘ಇತ್ತೀಚೆಗೆ ಸರ್ಕಾರವು ಸೆಟ್ಲೈಟ್ ಬಸ್ ನಿಲ್ದಾಣ ನಿರ್ಮಿಸಲು ಗುಲಬರ್ಗಾ ವಿವಿಯ ಜಮೀನು ಹಸ್ತಾಂತರಿಸುವಂತೆ ಒತ್ತಾಯಿಸುತ್ತಿದೆ. ಇದು ಸರಿಯಲ್ಲ. ಸೆಟ್ಲೈಟ್ ಬಸ್ ನಿಲ್ದಾಣ ನಿರ್ಮಿಸಿದರೆ ಅದಕ್ಕೆ ಹೊಂದಿಕೊಂಡತೆ ಬಾರ್ ರೆಸ್ಟೊರೆಂಟ್ ಮತ್ತಿತರ ಅಂಗಡಿಗಳು ತಲೆಯೆತ್ತಿ ಶೈಕ್ಷಣಿಕ ವಾತಾವರಣ ಹಾಳಾಗುತ್ತದೆ’ ಎಂದು ವಿದ್ಯಾರ್ಥಿ ಮುಖಂಡ ಅನಿಲ್ ಟೆಂಗಳಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.