ಕಲಬುರಗಿ: ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ತಕ್ಷಣವೇ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪ್ರತಿ ಎಕರೆಗೆ ₹ 50 ಸಾವಿರ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
‘ರೈತರ ಹೋಳು ಯಾರೂ ಕೇಳದಂತಾಗಿದೆ. ಸರ್ಕರ ಸ್ಪಂದಿಸುತ್ತಿಲ್ಲ. ಸರ್ಕಾರಕ್ಕೆ ಕಿವಿ ಕೇಳಿಸುತ್ತಿಲ್ಲ. ಕಣ್ಣು ಕಾಣಿಸುತ್ತಿಲ್ಲ. ಅತಿಯಾದ ಮಳೆಯಿಂದ ರೈತರು, ಕೂಲಿಕಾರ್ಮಿಕರು ತೊಂದರೆಯಲ್ಲಿದ್ದಾಗ ಬಿಜೆಪಿಯವರು ಜನ ಸ್ವರಾಜ್ ಯಾತ್ರೆ ಅರಂಭಿಸಿದ್ದಾರೆ. ಜನ, ಜಾನುವಾರು ಸಂಕಷ್ಟದಲ್ಲಿದ್ದಾಗ ಇಂತಹ ಯಾತ್ರೆ ಯಾರ ಹಿತಕ್ಕಾಗಿ. ಇದು ಜನ ಸ್ವರಾಜ್ ಯಾತ್ರೆಯಲ್ಲ. ಜನ ವಿರೋಧಿ ಯಾತ್ರೆ, ಮಳೆಯಿಂದ ತೊಗರಿ, ಹತ್ತಿ, ಜೋಳ, ಕಡಲೆ ಸಂಪೂರ್ಣ ಹಾಳಾಗಿವೆ. ಹೀಗಾಗಿ ಬೆಳೆ ಹಾನಿ ಸಮೀಕ್ಷೆ ಮಾಡಿ ಕಾಲ ಕಳೆಯುವ ಬದಲು ತ್ವರಿತವಾಗಿ ಪರಿಹಾರದ ಮೊತ್ತವನ್ನು ರೈತರ ಖಾತೆಗೆ ಜಮಾ ಮಾಡಬೇಕು’ ಎಂದು ಒತ್ತಾಯಿಸಿದರು.
ಮನೆ ಬಿದ್ದು ಬೀದಿ ಪಾಲಾದ ಕುಟುಂಬಕ್ಕೆ ಕನಿಷ್ಠ ₹ 5 ಲಕ್ಷ ಪರಿಹಾರ ನೀಡಬೇಕು. ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಕುಟುಂಬಕ್ಕೆ ₹ 25 ಲಕ್ಷ ನೀಡಬೇಕು ಎಂದರು.
ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಶಾಮರಾವ ಸೂರನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.