ADVERTISEMENT

ಜೇವರ್ಗಿ: ಎಕರೆಗೆ ₹25 ಸಾವಿರ ಪರಿಹಾರಕ್ಕೆ ಆಗ್ರಹ: ರೈತ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 5:59 IST
Last Updated 19 ಡಿಸೆಂಬರ್ 2025, 5:59 IST
ಜೇವರ್ಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು
ಜೇವರ್ಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು   

ಜೇವರ್ಗಿ: ಪ್ರತಿ ಕ್ವಿಂಟಲ್ ತೊಗರಿಗೆ ₹12 ಸಾವಿರ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸುವಂತೆ ಸೇರಿ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ತಾಲ್ಲೂಕು ಘಟಕದ ವತಿಯಿಂದ ಗುರುವಾರ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಸುಭಾಷ ಹೊಸಮನಿ ಮಾತನಾಡಿ, ‘₹12,500 ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಮಾಡಿ, ಪ್ರತಿ ಗ್ರಾಮ ಪಂಚಾಯತಿಗೊಂದು ಖರೀದಿ ಕೇಂದ್ರ ತೆರೆದು ತೊಗರಿ ಖರೀದಿ ಮಾಡಬೇಕು’ ಎಂದು ಆಗ್ರಹಿಸಿದರು.

‘ಸರ್ಕಾರದ ವತಿಯಿಂದ ಗುಣಮಟ್ಟದ ಬಿತ್ತನೆ ಬೀಜ ವಿತರಣೆ ಮಾಡಬೇಕು. ಅತಿವೃಷ್ಟಿಯಿಂದ ಹಾಳಾದ ಎಲ್ಲಾ ಬೆಳೆಗಳಿಗೆ ಪ್ರತಿ ಎಕರೆಗೆ ₹25 ಸಾವಿರದಂತೆ ಪರಿಹಾರ ವಿತರಿಸಬೇಕು. ಪರಿಹಾರ ಸಿಗದೆ ಇರುವ ಎಲ್ಲಾ ರೈತರ ಬ್ಯಾಂಕ್ ಖಾತೆಗೆ ಕೂಡಲೇ ಪರಿಹಾರ ಜಮಾ ಮಾಡಬೇಕು’ ಎಂದು ಒತ್ತಾಯಿಸದರು.

ADVERTISEMENT

‘ಎಲ್ಲಾ ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ₹5 ಲಕ್ಷದವರೆಗಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಉದ್ಯೋಗ ಖಾತರಿಯಲ್ಲಿ ಕೆಲಸ ಮಿತಿಯನ್ನು 250 ದಿನಗಳಿಗೆ ಹೆಚ್ಚಿಸಿ, ಕೂಲಿಯನ್ನು ₹600ಗೆ ಹೆಚ್ಚಳ ಮಾಡಬೇಕು. ವೃದ್ಧ ರೈತರಿಗೆ ಮತ್ತು ಕಾರ್ಮಿಕರಿಗೆ ಪ್ರತಿ ತಿಂಗಳು ₹7,500 ಮಾಶಾಸನ ಮಂಜೂರು ಎಂಬುದು ಸೇರಿ ಇತರ ಬೇಡಿಕೆಗಳ ಈಡೇರಿಸಬೇಕು’ ಎಂದು ಅವರು ಆಗ್ರಹಿಸಿದರು.

ನಂತರ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಮಲ್ಕಪ್ಪ ಹರನೂರ, ರೇವು ನಾಯಕ ಜಾಧವ, ಸಿದ್ದಣ್ಣ ಆದ್ವಾನಿ, ಗುರಪ್ಪ ಮುಕ್ಕಾ, ರಮೇಶ ಬಂದರವಾಡ, ಶಿವಯೋಗೆಪ್ಪ ಹೊನ್ನೂರ, ಈರಣ್ಣ ಸಾಥಖೇಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.