ಕಲಬುರ್ಗಿ: ‘ನಾನು ಬಿಜೆಪಿ ಸೇರುವುದು ಶುದ್ಧ ಸುಳ್ಳು. ಬಿಜೆಪಿಯವರು ಯಾರೂ ನನ್ನನ್ನು ಸಂಪರ್ಕಿಸಿಲ್ಲ’ ಎಂದು ಅಫಜಲಪುರ ಶಾಸಕ ಎಂ.ವೈ.ಪಾಟೀಲ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇವು ನನ್ನ ರಾಜಕೀಯ ಜೀವನದ ಕೊನೆಯ ದಿನಗಳು. ಹಾಗಾಗಿ ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಕಾರ್ಯಕರ್ತರು ಬಿಜೆಪಿ ಸೇರುವಂತೆ ಸೂಚಿಸಿದರೂ, ಅವರ ಮನ ಪರಿವರ್ತಿಸಿ ಕಾಂಗ್ರೆಸ್ನಲ್ಲೇ ಇರುತ್ತೇನೆ. 40 ವರ್ಷಗಳ ರಾಜಕೀಯ ಜೀವನದಲ್ಲಿ ಸಾಕಷ್ಟು ಏಳು–ಬೀಳುಗಳನ್ನು ಕಂಡಿದ್ದೇನೆ’ ಎಂದು ತಿಳಿಸಿದರು.
‘ಅಫಜಲಪುರ ತಾಲ್ಲೂಕಿನಲ್ಲಿ ಬಿಜೆಪಿಗೆ 35 ಸಾವಿರ ಲೀಡ್ ಬಂದಿದೆ. ಈ ಬಗ್ಗೆ ಸಾಕಷ್ಟು ಜನರು ಮಾತನಾಡಿಕೊಂಡಿದ್ದಾರೆ. ನನ್ನ ಚುನಾವಣೆಗಿಂತ ಹೆಚ್ಚು ಕೆಲಸ ಮಾಡಿದ್ದೇನೆ. ಆದರೆ, ಜನರು ವ್ಯತಿರಿಕ್ತವಾಗಿ ತೀರ್ಪು ಕೊಟ್ಟಿದ್ದಾರೆ. ದೇಶದೆಲ್ಲೆಡೆ ಕೂಡ ಇದೇ ರೀತಿ ತೀರ್ಪು ಬಂದಿದೆ. ಈ ಬಗ್ಗೆ ಚರ್ಚಿಸಲು ಕಾರ್ಯಕರ್ತರ ಸಭೆ ಕರೆದಿದ್ದೇನೆ. ನನ್ನ ಆಡಳಿತದಲ್ಲಿ ಎಲ್ಲಾದರೂ ವೈಫಲ್ಯವಾಗಿದೆಯೇ ಎಂಬುದರ ಬಗ್ಗೆಯೂ ಚರ್ಚಿಸುತ್ತೇನೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.