
ಕಲಬುರಗಿ: ‘ಬಾಂಗ್ಲಾದೇಶದ ನುಸುಳುಕೋರರನ್ನು ತಡೆಯುವ ಬದಲು ರಾಜ್ಯಗಳ ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಗ್ಗೆ ಯೋಚಿಸುವ ಅಮಿತ್ ಶಾ ದೇಶ ಕಂಡ ಅತ್ಯಂತ ಅಸಮರ್ಥ ಗೃಹಸಚಿವ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಲ್ಲಿ ಟೀಕಿಸಿದರು.
‘ಬಿಜೆಪಿ ಆಡಳಿತದಲ್ಲಿರುವ ಅಸ್ಸಾಂ ಮತ್ತಿತರ ರಾಜ್ಯಗಳ ಗಡಿಯ ಮೂಲಕವೇ ಬಾಂಗ್ಲಾ ನುಸುಳುಕೋರರು ಬರುತ್ತಿದ್ದಾರೆ. ದೇಶದ ಗಡಿ ಕಾಯಬೇಕಾದವರು ಸಿದ್ದರಾಮಯ್ಯ, ಜಿ. ಪರಮೇಶ್ವರ ಅವರೋ ಅಥವಾ ಕೇಂದ್ರ ಗೃಹಸಚಿವ ಅಮಿತ್ ಶಾ ಅವರೋ?’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
‘ಮಾತಿಗೊಮ್ಮೆ ರಾಜ್ಯದಲ್ಲಿ ಬಾಂಗ್ಲಾದೇಶಿಯವರು ನುಸುಳಿದ್ದಾರೆ ಎಂದು ಬಿಜೆಪಿಯವರು ಆರೋಪಿಸುತ್ತಾರೆ. ಅದಕ್ಕೆ ಕಾರಣ ಅವರದೇ ಪಕ್ಷದ ಸರ್ಕಾರದ ಗೃಹಸಚಿವರು ಎಂಬುದು ಗೊತ್ತಿಲ್ಲವೇ’ ಎಂದು ಕೇಳಿದರು.
‘ಕೇಂದ್ರದಲ್ಲಿ ನಮ್ಮ ಪಕ್ಷದ ಸರ್ಕಾರ ಇದ್ದಾಗ ಒಂದು ಲಕ್ಷ ಬಾಂಗ್ಲಾದೇಶಿಯರನ್ನು ವಾಪಸು ಕಳುಹಿಸಲಾಗಿತ್ತು. 11 ವರ್ಷಗಳಿಂದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಏಳು ಸಾವಿರ ಜನರನ್ನೂ ಕಳುಹಿಸಿಲ್ಲ. ಕಠಿಣ ನಿಲುವು ತೆಗೆದುಕೊಳ್ಳಬೇಕಾಗಿದ್ದ ಅಮಿತ್ ಶಾ ಅವರು, ಇಡಿ, ಸಿಬಿಐ ಬಳಸಿಕೊಂಡು ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಬುಡಮೇಲು ಮಾಡುವಲ್ಲಿ ನಿರತರಾಗಿದ್ದಾರೆ’ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.