ADVERTISEMENT

ಕಲಬುರಗಿ: ಲೋಕ ಅದಾಲತ್‌; 2.31 ಲಕ್ಷ ಪ್ರಕರಣ ಇತ್ಯರ್ಥ

ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಅದಾಲತ್‍: 5 ಪ್ರಕರಣಗಳಲ್ಲಿ ಒಂದಾದ ಪತಿ–ಪತ್ನಿ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 6:07 IST
Last Updated 14 ಡಿಸೆಂಬರ್ 2025, 6:07 IST
ಕಲಬುರಗಿಯ ಹೈಕೋರ್ಟ್‌ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಮೂರ್ತಿ ಪಿ. ಶ್ರೀ ಸುಧಾ ಅವರು ಪ್ರಕರಣಗಳನ್ನು ಪರಿಶೀಲಿಸಿದರು.ಪ್ರಜಾವಾಣಿ ಚಿತ್ರ
ಕಲಬುರಗಿಯ ಹೈಕೋರ್ಟ್‌ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಮೂರ್ತಿ ಪಿ. ಶ್ರೀ ಸುಧಾ ಅವರು ಪ್ರಕರಣಗಳನ್ನು ಪರಿಶೀಲಿಸಿದರು.ಪ್ರಜಾವಾಣಿ ಚಿತ್ರ   

ಕಲಬುರಗಿ: ಕರ್ನಾಟಕ ಹೈಕೋರ್ಟ್‌ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಶನಿವಾರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಒಟ್ಟು 2,31,943 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ.

ಅದಾಲತ್‌ನಲ್ಲಿ 13,558 ಬಾಕಿ ಪ್ರಕರಣಗಳು ಹಾಗೂ 2,18,385 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿವೆ. ಇದೇ ಸಂದರ್ಭದಲ್ಲಿ ಜಿಲ್ಲೆಯ 5 ಪ್ರಕರಣಗಳಲ್ಲಿ ಬೇರೆಯಾಗಿದ್ದ ಪತಿ ಮತ್ತು ಪತ್ನಿ ಅವರನ್ನು ಒಂದುಗೂಡಿಸಲಾಯಿತು. 10 ವರ್ಷಗಳಿಗಿಂತ ಹೆಚ್ಚಿನ ಅವಧಿಯ 1 ಪ್ರಕರಣ ಹಾಗೂ 5 ವರ್ಷಗಳಿಗಿಂತ ಹೆಚ್ಚಿನ ಅವಧಿಯ 13 ಪ್ರಕರಣಗಳನ್ನು ಸಹ ರಾಜಿ ಮಾಡಿಸಲಾಗಿದೆ.

93 ಮೋಟಾರು ವಾಹನ ಅಪಘಾತ ಪ್ರಕರಣಗಳನ್ನು ವಿಲೇವಾರಿ ಮಾಡಿ, ₹9.63 ಕೋಟಿ ಪರಿಹಾರ ಮಂಜೂರು ಮಾಡಲಾಗಿದೆ. ಅಲ್ಲದೆ, 120 ಭೂಸ್ವಾಧೀನ ಪ್ರಕರಣಗಳನ್ನು ವಿಲೇವಾರಿ ಮಾಡಿ, ₹15.96 ಕೋಟಿ ಪರಿಹಾರ ವಿತರಿಸುವಂತೆ ಸಂಬಂಧಿತರಿಗೆ ಆದೇಶಿಸಲಾಗಿದೆ.

ADVERTISEMENT

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಲ್. ಲಕ್ಷ್ಮೀನಾರಾಯಣ ಸೇರಿದಂತೆ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ವಕೀಲರು, ಸಾರ್ವಜನಿಕರು ಹಾಗೂ ಕಕ್ಷಿದಾರರ ಸಹಕಾರದಿಂದ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗಿದೆ.

‘ಲೋಕ ಅದಾಲತ್‌ನಲ್ಲಿ ಸಿವಿಲ್ ದಾವೆಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ರಾಜಿಆಗಬಹುದಾದ ಕ್ರಿಮಿನಲ್ ಪ್ರಕರಣ, ಚೆಕ್ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣಗಳು, ಬ್ಯಾಂಕ್‍ಗಳಿಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್‍ ಯಶಸ್ವಿಯಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ತಿಳಿಸಿದ್ದಾರೆ.

ಕಲಬುರಗಿಯ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ನಡೆಯಿತು

ಹೈಕೋರ್ಟ್‌: ₹2.50 ಕೋಟಿ ಪರಿಹಾರ ಮಂಜೂರು

ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಇಲ್ಲಿನ ಕಲಬುರಗಿ ಹೈಕೋರ್ಟ್‌ ಪೀಠದಲ್ಲಿ ಶನಿವಾರ ಹೈಕೋರ್ಟ್‌ ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 105 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಒಟ್ಟು ₹25042000 ಕೋಟಿ ಪರಿಹಾರ ಮಂಜೂರು ಮಾಡಲಾಯಿತು. ಹೈಕೋರ್ಟ್‌ ನ್ಯಾಯಮೂರ್ತಿ ಪಿ. ಶ್ರೀ ಸುಧಾ ಅವರ ನೇತೃತ್ವದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ ಸಿವಿಲ್ ಹಾಗೂ ಕೌಟುಂಬಿಕ ಕಲಹ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು ಎಂದು ಹೈಕೋರ್ಟ್‌ ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.