ಕಲಬುರಗಿ: ಅಧೀಕ್ಷಕ ಎಂಜಿನಿಯರ್ ಮುಖಕ್ಕೆ ಮಸಿ ಬಳಿದಿದ್ದನ್ನು ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಸರ್ಕಾರಿ ನೌಕರರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಲೋಕೋಪಯೋಗಿ ಭವನದ ಎದುರು ಜಮಾಯಿಸಿದ ಲೋಕೋಪಯೋಗಿ ಇಲಾಖೆ ನೌಕರರು, ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಕಾಲ ಧರಣಿ ನಡೆಸಿದರು.
ಬಳಿಕ ಅಲ್ಲಿಂದ ಹೊರಟು ಹಳೇ ಜೇವರ್ಗಿ ರಸ್ತೆ, ಸರ್ದಾರ್ ಪಟೇಲ್ ವೃತ್ತದ ಮೂಲಕ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ(ಕುಡಾ) ತಲುಪಿದರು. ಅಲ್ಲಿ ಕುಡಾ ನೌಕರರ ಸಂಘದ ಸದಸ್ಯರು ಪ್ರತಿಭಟನಾ ಮೆರವಣಿಗೆಗೆ ಜೊತೆಗೂಡಿದರು. ಬಳಿಕ ಮೆರವಣಿಗೆಯು ಜಿಲ್ಲಾಧಿಕಾರಿ ಕಚೇರಿ ತಲುಪಿತು. ಮೆರವಣಿಗೆಯುದ್ದಕ್ಕೂ ‘ಅಯ್ಯಯ್ಯೋ ಅನ್ಯಾಯ, ಬೇಕೇ ಬೇಕು ನ್ಯಾಯ ಬೇಕು’ ಎಂದು ಘೋಷಣೆ ಮೊಳಗಿಸಿದರು.
‘ಪೊಲೀಸರ ಸಮ್ಮುಖದಲ್ಲೇ ಸರ್ಕಾರಿ ಅಧಿಕಾರಿಗಳಿಗೆ ಮಸಿ ಬಳಿದು, ಬೆದರಿಕೆ ಹಾಕಲಾಗಿದೆ. ಈ ಕೃತ್ಯದ ಹಿಂದಿರುವ ಎಲ್ಲ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ‘ಸರ್ಕಾರಿ ಅಧಿಕಾರಿಗಳಿಗೆ ಕಿಡಿಗೇಡಿಗಳು ಮಸಿ ಬಳಿದಿರುವುದು ಖಂಡನೀಯ. ಇತ್ತೀಚಿಗೆ ಸರ್ಕಾರಿ ಅಧಿಕಾರಿಗಳಿಗೆ ಮುಕ್ತವಾಗಿ ಕೆಲಸ ಮಾಡುವ ವಾತಾವರಣವೇ ಇಲ್ಲದಂತಾಗಿದೆ. ಸಂಘಟನೆಗಳ ಹೆಸರು ಹೇಳಿಕೊಂಡು ಬರುವ ಕಿಡಿಗೇಡಿಗಳು ಅಧಿಕಾರಿಗಳನ್ನು ಬೆದರಿಸುವ ಕೆಲಸ ಮಾಡುತ್ತಿವೆ. ಇಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರಿ ನೌಕರರಿಗೆ ಜಿಲ್ಲಾಡಳಿತ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು ಆಗ್ರಹಿಸಿದರು.
‘ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ನೌಕರರ ಮೇಲೆ ಸಂಘಟನೆಗಳು, ಆರ್ಟಿಐ ಅಡಿಯಲ್ಲಿ ಒತ್ತಡ ಹಾಕುವ ಕೆಲಸ ನಡೆಯುತ್ತಿದೆ. ಅಧಿಕಾರಿಗಳು ತಪ್ಪು ಮಾಡಿದ್ದರೆ, ಅವರ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಲು ಅವಕಾಶವಿದೆ. ಅದನ್ನು ಬಿಟ್ಟು ಮಾನಸಿಕ ಕಿರುಕುಳ, ವೈಯಕ್ತಿಕ ನಿಂದನೆ ಸಹಿಸಲು ಸಾಧ್ಯವಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ನೌಕರರ ಸಂಘದಿಂದ ಮನವಿ ಸಲ್ಲಿಸಲು ಮುಂದಾದರು. ಜಿಲ್ಲಾಧಿಕಾರಿ ಕಚೇರಿ ಶಿಷ್ಟಾಚಾರ ತಹಶೀಲ್ದಾರ್ ಮನವಿ ಸ್ವೀಕರಿಸಲು ಬಂದರು. ಆದರೆ, ಜಿಲ್ಲಾಧಿಕಾರಿಯೇ ಬಂದು ಅಹವಾಲು ಆಲಿಸಬೇಕು ಎಂದು ಪ್ರತಿಭಟನಕಾರರು ಪಟ್ಟು ಹಿಡಿದರು. ಮತ್ತೆ ಸುಮಾರು ಅರ್ಧ ಗಂಟೆ ಪ್ರತಿಭಟನೆ ಮುಂದುವರಿಸಿದರು. ಅಂತಿಮವಾಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಬಂದು ಮನವಿ ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರ ಸಂಘದ ಧರ್ಮರಾಜ ಜವಳಿ, ಮಹೇಶ ಹೂಗಾರ, ಶಶಿಕಾಂತ ಹೋಳ್ಕರ, ಶ್ರೀಮಂತ ಪಟ್ಟೆದಾರ, ಚಂದ್ರಕಾಂತ ಹೇರಿ, ಎಂ.ಬಿ.ಪಾಟೀಲ, ಸಂತೋಷ ಗಂಗು, ಲೋಕೋಪಯೋಗಿ ಇಲಾಖೆ ನೌಕರರ ಸಂಘದ ಅಧ್ಯಕ್ಷ ಶರಣರಾಜ ಚಪ್ಪರಬಂದಿ, ಮಹಾಂತೇಶ ರೋಡಗಿ, ಉಷಾ ಪಾಟೀಲ, ಗಿರಿಜಾರ, ಖುರ್ಷಿದಾಬಾನು, ಗೌರಿ ದೇಸಾಯಿ,ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ನೌಕರರ ಸಂಘ ಪದಾಧಿಕಾರಿಗಳು, ಜಿಲ್ಲಾ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಕರ್ನಾಟಕ ಎಂಜಿನಿಯರ್ ಸೇವಾ ಸಂಘದ ಜಿಲ್ಲಾ ಪದಾಧಿಕಾರಿಗಳು ಸೇರಿದಂತೆ 300 ಮಂದಿಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸರ್ಕಾರಿ ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಮಾಡುತ್ತಾರೆ. ಆ ಅಧಿಕಾರಿಗಳ ರಕ್ಷಣೆ ಸರ್ಕಾರದ ಕರ್ತವ್ಯ.ಬಸವರಾಜ ಬಳೂಂಡಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.