
ಕಲಬುರಗಿ: ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಸುರಿದ ಮಳೆ ಮತ್ತು ಭೀಮಾ ಪ್ರವಾಹದಿಂದ ಜಿಲ್ಲೆಯಾದ್ಯಂತ ಸಾಕಷ್ಟು ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದೆ. ಹೀಗಾಗಿ ಇಲಾಖಾವಾರು ಕೂಡಲೇ ಜಿಲ್ಲಾಡಳಿತಕ್ಕೆ ಸಮಗ್ರ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರವಾಹದಿಂದ ಹಾಗೂ ಭಾರಿ ಮಳೆಯಿಂದ ಹಾನಿಯಾದ ಮೂಲಸೌಕರ್ಯಗಳಾದ ರಸ್ತೆ, ಸೇತುವೆ, ಶಾಲೆ-ಅಂಗನವಾಡಿ, ಮನೆ, ಬೆಳೆ ಹಾನಿ ಇತ್ಯಾದಿ ಕುರಿತು ಜಂಟಿ ಸಮೀಕ್ಷೆ ವರದಿಗಳ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
‘ಬುಧವಾರವೇ (ಅ.8) ಇಲಾಖಾವಾರು ವರದಿ ಸಲ್ಲಿಸಬೇಕು’ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.
‘ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ಹಾನಿ ಕುರಿತು ಜಂಟಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಬೇಕು. ಮನೆ ಹಾನಿಯಾಗಿರುವ ಕುರಿತು ರಾಜೀವ್ಗಾಂಧಿ ತಂತ್ರಾಂಶದಲ್ಲಿ ದಾಖಲಿಸಬೇಕು. ರಸ್ತೆ, ಸೇತುವೆ, ಕೆರೆ, ವಿದ್ಯುತ್ ಪರಿವರ್ತಕಗಳು, ಕಂಬಗಳು, ಪೈಪ್ಲೈನ್ ಹಾನಿ ಕುರಿತು ಆಯಾ ಇಲಾಖೆಯ ಅಧಿಕಾರಿಗಳು ಜಿಯೊ ಟ್ಯಾಗ್ನೊಂದಿಗಿನ ಭಾವಚಿತ್ರದೊಂದಿಗೆ ವರದಿ ಸಲ್ಲಿಸಬೇಕು’ ಎಂದರು.
‘ಇದೀಗ ಪ್ರವಾಹ ಇಳಿಮುಖವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ಆರೋಗ್ಯ ಇಲಾಖೆಯಿಂದ ಗ್ರಾಮಗಳಲ್ಲಿ ಬ್ಲೀಚಿಂಗ್ ಪೌಡರ್ ಸಿಂಪಡಿಸಬೇಕು. ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕಲುಷಿತ ನೀರು ಪೂರೈಕೆ ಆಗದಂತೆ ಎಚ್ಚರ ವಹಿಸಬೇಕು. ವಿದ್ಯುತ್ ಕಂಬ, ಟ್ರಾನ್ಸ್ ಫಾರ್ಮರ್ ಶಿಥಿಲಾವಸ್ಥೆಯಲ್ಲಿ ಇದಲ್ಲಿ ಕೂಡಲೆ ಬದಲಾಯಿಸಬೇಕು. ಮಳೆಯಿಂದ ಸೋರಿಕೆಯಾಗುವ ಶಾಲಾ, ಅಂಗನವಾಡಿ ಕಟ್ಟಡ ಗುರುತಿಸಿ ದುರಸ್ತಿ ಕೈಗೊಳ್ಳಬೇಕು’ ಎಂದು ಫೌಜಿಯಾ ತರನ್ನುಮ್ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂದೆ, ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಉಪವಿಭಾಗಾಧಿಕಾರಿ ಸಾಹಿತ್ಯಾ ಆಲದಕಟ್ಟಿ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ, ಲೋಕೋಪಯೋಗಿ ಇಲಾಖೆಯ ಇಇ ಸುಭಾಷ ಬಿರಾದಾರ, ಡಿಎಚ್ಒ ಡಾ.ಶರಣಬಸಪ್ಪ ಕ್ಯಾತನಾಳ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.