ADVERTISEMENT

ಕಲಬುರ್ಗಿಯಲ್ಲಿ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 22 ಮೇ 2019, 7:11 IST
Last Updated 22 ಮೇ 2019, 7:11 IST
   

ಕಲಬುರ್ಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ಜಿಲ್ಲಾ ಚುನಾವಣಾ ಅಧಿಕಾರಿ ಆರ್.ವೆಂಕಟೇಶಕುಮಾರ್ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಗುಲಬರ್ಗಾ ಲೋಕಸಭಾ ಹಾಗೂ ಚಿಂಚೋಳಿ ಉಪ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚಿಂಚೋಳಿ ಮತಕ್ಷೇತ್ರದ ಎಣಿಕೆಗೆ ಪ್ರತ್ಯೇಕ ಮತ ಎಣಿಕೆ ಕೇಂದ್ರವನ್ನು ತೆರೆಯಲಾಗಿದೆ. ಈಗಾಗಲೇ ಅಣಕು ಮತ ಎಣಿಕೆ ಮಾಡಲಾಗಿದೆ. ಒಟ್ಟು 14 ಟೇಬಲ್ ಮಾಡಲಾಗಿದ್ದು, 14 ಜನ ಏಜೆಂಟ್ ಮತ್ತು ಒಬ್ಬರು ಆರ್.ಒ ಇರುತ್ತಾರೆ ಎಂದು ಮಾಹಿತಿ ನೀಡಿದರು.

ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಗುವುದು. ಮೊಬೈಲ್ ಫೋನ್ ಬಳಸುವಂತಿಲ್ಲ. ಅಧಿಕಾರಿಗಳು ಕೂಡ ಬಳಸುವಂತಿಲ್ಲ. ವಿಶ್ವವಿದ್ಯಾಲಯದ ಆವರಣದೊಳಕ್ಕೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. 130ಕ್ಕೂ ಅಧಿಕ ಅರೆ ಸೇನಾ ಪಡೆ ಸಿಬ್ಬಂದಿ, 2 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಹೊರಗಡೆ ಮೂರು ಹಂತದ ಭದ್ರತೆಯನ್ನು ಒದಗಿಸಲಾಗಿದೆ. ಮತ ಎಣಿಕೆ ಕೇಂದ್ರದ 100 ಮೀ. ಸುತ್ತಮುತ್ತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ADVERTISEMENT

2 ಸಾವಿರ ಮತ ಎಣಿಕೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು 20 ಸುತ್ತು ಮತ ಎಣಿಕೆ ನಡೆಯಲಿದೆ. ಇವಿಎಂ ಎಣಿಕೆ ಮುಗಿದ ಬಳಿಕ ವಿ.ವಿ. ಪ್ಯಾಟ್ ಎಣಿಕೆ ಮಾಡಲಾಗುವುದು. ಇದಕ್ಕಾಗಿ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಚಿಂಚೋಳಿಯಲ್ಲಿ ಅಂಚೆ ಮತಪತ್ರಗಳ ಸಂಖ್ಯೆ ಬಹಳ ಕಡಿಮೆ ಇದೆ. 14 ಟೇಬಲ್ ಗಳನ್ನು ಅಳವಡಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಗಲಾಟೆ ಆಗಬಾರದು ಎಂಬ ಕಾರಣಕ್ಕೆ ಮೆರವಣಿಗೆ, ವಿಜಯೋತ್ಸವ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಸುವಿಧಾ ಆ್ಯಪ್ ನಲ್ಲಿ ಮತ ಎಣಿಕೆಯ ಅಪ್ಡೇಟ್ ಸಿಗಲಿದೆ. ಒಂದೊಂದು ಸುತ್ತಿನ ಎಣಿಕೆ ಬಳಿಕ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ, ಶಿಷ್ಟಾಚಾರ ತಹಶಿಲ್ದಾರ್ ಪ್ರಕಾಶ ಚಿಂಚೋಳಿಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.