ಅಜಯ್ ಸಿಂಗ್
ಕಲಬುರಗಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ, ರಾಜೀನಾಮೆ ಪ್ರಶ್ನೆಯೇ ಬರುವುದಿಲ್ಲ. ಎಲ್ಲ 135 ಶಾಸಕರು, ಇಡೀ ಸಚಿವ ಸಂಪುಟ ಸಿದ್ದರಾಮಯ್ಯ ಅವರೊಂದಿಗಿದೆ’ ಎಂದು ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಸ್ಪಷ್ಟಪಡಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಒಂದೂವರೆ ವರ್ಷದಿಂದ ಜನಪರ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯ ಅವರ ಮೇಲೆ ಕಪ್ಪು ಚುಕ್ಕೆ ತರುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಜನರ ಸಂಪೂರ್ಣ ಆಶೀರ್ವಾದಿಂದ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಗಟ್ಟಿಯಾಗಿದೆ. ಮುಡಾ ಹಗರಣದ ಹೆಸರಿನಲ್ಲಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿಯವರು ಪ್ರಯತ್ನ ಪಡುತ್ತಿದ್ದಾರೆ. ಇದಕ್ಕೆಲ್ಲ ಕೇಂದ್ರ ಸರ್ಕಾರ ಕುಮ್ಮಕ್ಕು ನೀಡುತ್ತಿದೆ’ ಎಂದು ಆರೋಪಿಸಿದರು.
ಕೆಕೆಆರ್ಡಿಬಿಯಿಂದ ಹಿಂದಿನ ಹಾಗೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗಾಗಿ ಶೇ 25ರಷ್ಟು ಹಣ ಮೀಸಲಿಟ್ಟು, ಶಾಲೆಗಳಿಗೆ ಬಳಕೆ ಮಾಡಬೇಕೆಂದು ಹೇಳಿದ್ದೇವೆ. ಅದರಂತೆ ಉನ್ನತ ಶಿಕ್ಷಣ ಅಭಿವೃದ್ಧಿಗೆ ಹಣ ನೀಡುವಂತೆ ರಾಜ್ಯಪಾಲರು ಕೇಳಿದ್ದರಿಂದ ಶೇ 5ರಷ್ಟು ಮೀಸಲು ಇಡಲಾಗಿದೆ. ಇದು ಕಲ್ಯಾಣ ಕರ್ನಾಟಕದ ವಿಶ್ವವಿದ್ಯಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆಯಾಗಲಿದೆ. ರಾಜ್ಯಪಾಲರು ವಿ.ವಿ ಕುಲಾಧಿಪತಿ ಆಗಿದ್ದರಿಂದ ಅವರಿಗೆ ಹಣ ಮೀಸಲು ಇಡಲಾಗಿದೆ. ಇದರ ಕುರಿತು ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರ ಜತೆ ಚರ್ಚೆ ಮಾಡಿ ಈ ನಿರ್ಣಯ ಮಾಡಲಾಗಿದೆ’ ಎಂದು ಅಜಯ್ ಸಿಂಗ್ ಸ್ಪಷ್ಟಪಡಿಸಿದರು.
ಖರ್ಗೆ ಕುಟುಂಬಕ್ಕೆ ಸಿಎ ನಿವೇಶನ ವಿಚಾರವಾಗಿ ಈಗಾಗಲೇ ಸಚಿವ ಎಂ.ಬಿ.ಪಾಟೀಲ ಸ್ಪಷ್ಟನೆ ನೀಡಿದ್ದಾರೆ. ಸಿಎ ನಿವೇಶನ ಯುವಕರ ಕೌಶಲ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ-ಡಾ. ಅಜಯ್ ಸಿಂಗ್, ಕೆಕೆಆರ್ಡಿಬಿ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.