ಕಲಬುರ್ಗಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಅವರು ಹೇಳಿದಂತೆಯೇ ಗುಲಬರ್ಗಾ ವಿ.ವಿ. ನಡೆದುಕೊಳ್ಳುತ್ತಿದೆ ಎಂದು ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಕುಮಾರ್ ಟೀಕಿಸಿದರು.
ಉಪನ್ಯಾಸ ಕಾರ್ಯಕ್ರಮಕ್ಕೆ ಗುಲಬರ್ಗಾ ವಿ.ವಿ. ಅನುಮತಿ ನಿರಾಕರಿಸಿದ ಬಳಿಕ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಮೂರೂವರೆ ವರ್ಷಗಳಲ್ಲಿ ನಾನು ಎಲ್ಲಿಯೇ ಹೋದರೂ ಅಲ್ಲಿ ಕಾರ್ಯಕ್ರಮ ನಡೆಸದಂತೆ ನಿಷೇಧ ಹೇರಲಾಗುತ್ತಿದೆ. ಕಲಬುರ್ಗಿಯಲ್ಲಿಯೂ ಅದೇ ನಡೆದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ವಿದ್ಯಾರ್ಥಿಗಳು ಆಹ್ವಾನಿಸಿದ್ದರು ಎಂದು ಉಪನ್ಯಾಸ ನೀಡಲು ಬಂದಿದ್ದೆ. ವಾಕ್ ಸ್ವಾತಂತ್ರ್ಯ ಸಂವಿಧಾನವೇ ನಮಗೆ ನೀಡಿದ ಮೂಲಭೂತ ಹಕ್ಕು. ಅದನ್ನು ನಮ್ಮಿಂದ ಕಿತ್ತುಕೊಳ್ಳಲಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಭಾರತದಲ್ಲಿ ದಲಿತರು ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಸರ್ಕಾರದ ವಿರುದ್ಧ ಯಾರಾದರೂ ಮಾತನಾಡಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ’ ಎಂದು ಹರಿಹಾಯ್ದರು.
ಖಾಸಗಿಗೆ ಲಾಭ ಮಾಡಿಕೊಟ್ಟ ಮೋದಿ: ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಬುದ್ಧ ಶಾಂತಿ ಅಂತಾರೆ, ಭಾರತಕ್ಕೆ ಹಿಂದಿರಗುತ್ತಿದ್ದಂತೆಯೇ ಯುದ್ಧ ಅಂತಾರೆ. ಸಾರ್ವಜನಿಕ ಉದ್ಯಮಗಳನ್ನು ಒಂದೊಂದಾಗಿ ಖಾಸಗಿ ವಲಯಕ್ಕೆ ವರ್ಗಾಯಿಸುತ್ತಿದ್ದಾರೆ. ಈ ಹಿಂದೆ ಪೆಟ್ರೋಲಿಯಂ ಉದ್ಯಮದಲ್ಲಿದ್ದ ರಿಲಯನ್ಸ್ ಆ ಕ್ಷೇತ್ರದ ಸಹವಾಸವೇ ಬೇಡ ಎಂದು ದೂರ ಸರಿದಿತ್ತು. ಈಗ ಭಾರತ್ ಪೆಟ್ರೋಲಿಯಂ ಖಾಸಗಿ ವಲಯಕ್ಕೆ ವಹಿಸುವ ಮೋದಿ ಮಾತು ಹೊರಬೀಳುತ್ತಿದ್ದಂತೆಯೇ ರಿಲಯನ್ಸ್ ತಾನು ಭಾರತ್ ಪೆಟ್ರೋಲಿಯಂ ವಹಿಸಿಕೊಳ್ಳಲು ಮುಂದಾಗಿದೆ. ಇದ್ಯಾವ ನೀತಿ ತೋರಿಸುತ್ತದೆ? ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿ ಬಡತನ ಕುಟುಂಬದಿಂದ ಬಂದ ವ್ಯಕ್ತಿ ಎಂಬುದನ್ನು ಬಿಂಬಿಸಲು ಬಿಜೆಪಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ.
ಇದನ್ನೂ ಓದಿ:ರದ್ದು, ಅನುಮತಿ, ರದ್ದು, ಸ್ಥಳಾಂತರ, ಮತ್ತೆ ರದ್ದು!
ಸರ್ದಾರ್ ವಲ್ಲಭಬಾಯಿ ಪಟೇಲ್ ತಮಗಾಗಿ ಒಂದು ಮನೆ ನಿಮಿ೯ಸಿಕೊಳ್ಳಲಿಲ್ಲ. ತಾವು ಮನೆ ನಿರ್ಮಿಸಿಕೊಂಡರೆ ಇನ್ನೆಲ್ಲಿ ಜನರ ಮನೆಗಳ ನಿರ್ಮಾಣಕ್ಕೆ ಹಣದ ಕೊರತೆ ಕಾಡುತ್ತದೋ ಎಂಬ ಆತಂಕ ಅವರಿಗಿತ್ತು. ಈಗ ನೋಡಿದರೆ ಸರ್ದಾರ್ ಹೆಸರಿನಲ್ಲಿ ₹ 3 ಸಾವಿರ ಕೋಟಿ ಖರ್ಚು ಮಾಡಿ ಸ್ಮಾರಕ ನಿರ್ಮಿಸಲಾಗಿದೆ. ಈಗ ಸರ್ದಾರ್ ಇದ್ದಿದ್ದರೆ ಅವರ ಗತಿ ಹೇಗಿರುತ್ತಿತ್ತೊ ಗೊತ್ತಿಲ್ಲ ಎಂದರು.
ಕೇವಲ ₹ 300 ಕೋಟಿ ಖರ್ಚು ಮಾಡಿದರೆ ಒಂದು ಮೆಡಿಕಲ್ ಕಾಲೇಜು ನಿರ್ಮಿಸಿದ್ದರೆ ಸಾವಿರಾರು ಬಡ ವಿದ್ಯಾರ್ಥಿಗಳು ಕಲಿಯುತ್ತಿದ್ದರಲ್ಲ ಎಂದು ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.