ಕಲಬುರ್ಗಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಕೃಷಿಗೆ ಸಂಬಂಧಿತ ಕಾಯ್ದೆಗಳ ಜಾರಿ ವಿರೋಧಿಸಿ ವಿವಿಧ ರೈತ ಹಾಗೂ ಕನ್ನಡಪರ ಸಂಘಟನೆಗಳು ನಗರದಲ್ಲಿ ಬೆಳಿಗ್ಗೆಯಿಂದ ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದರಿಂದಾಗಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ
ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಪಾಸ್ ಮಾಡಿರುವ ಕಾರ್ಮಿಕ ವಿರೋಧಿಯಾದ ಕಾರ್ಪೊರೇಟ್ ಬಂಡವಾಳ ಪರವಾದ ಕಾರ್ಮಿಕ ಕಾನೂನುಗಳ ತಿದ್ದುಪಡಿಯ ನಾಲ್ಕು ಸಂಹಿತೆಗಳಾದ ಕೈಗಾರಿಕಾ ಸಂಬಂಧಗಳ ಸಂಹಿತೆ, ವೃತ್ತಿ ಆಧಾರಿತ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ, ಸಾಮಾಜಿಕ ಭದ್ರತಾ ಮಸೂದೆಗಳು ಹಾಗೂ ಈಗಾಗಲೇ ರೂಪಿಸಿರುವ ವೇತನ ಸಂಹಿತೆಯನ್ನೂ ವಾಪಸ್ ಪಡೆಯಬೇಕು ಎಂದೂ ಒತ್ತಾಯಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘಟನೆ, ರೈತ ಕೃಷಿ ಕಾರ್ಮಿಕರ ಸಂಘಟನೆ, ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ನವನಿರ್ಮಾಣ ಸೇನೆ ಸೇರಿದಂತೆ ಹಲವು ಸಂಘಟನೆಗಳು ಬಂದ್ ನಲ್ಲಿ ಭಾಗವಹಿಸಿವೆ.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿದ್ದರೂ ಮುಂಜಾಗ್ರತಾ ಕ್ರಮವಾಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಬೆಳಿಗ್ಗೆ ನಗರಕ್ಕೆ ಬೇರೆ ಜಿಲ್ಲೆಗಳಿಂದ ಬಂದ್ ಬಸ್ ಗಳನ್ನು ಪೊಲೀಸ್ ರಕ್ಷಣೆಯೊಂದಿಗೆ ಬಸ್ ನಿಲ್ದಾಣಕ್ಕೆ ಕರೆತರಲಾಯಿತು.
ರೈತ ಸಂಘಟನೆಗಳ ಮುಖಂಡರಾದ ಮಾರುತಿ ಮಾನಪಡೆ, ಶರಣಬಸಪ್ಪ ಮಮಶೆಟ್ಟಿ, ಮೌಲಾ ಮುಲ್ಲಾ, ಮಹೇಶ ಎಸ್.ಬಿ. ರವಿ ದೇಗಾಂವ ಇತರರು ಬಂದ್ ನಲ್ಲಿ ಭಾಗವಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.