ADVERTISEMENT

ಆಳಂದ: ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಅರ್ಜಿದಾರರಿಗಷ್ಟೇ ಹೈಕೋರ್ಟ್‌ ಅವಕಾಶ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 15:38 IST
Last Updated 11 ಫೆಬ್ರುವರಿ 2026, 15:38 IST
   

ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೇವಲ ಅರ್ಜಿದಾರರಿಗೆ ಮಾತ್ರವೇ ನೀಡಿ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಬುಧವಾರ ಆದೇಶಿಸಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಮಹಾಶಿವರಾತ್ರಿಯ ಪವಿತ್ರ ದಿನದಂದು 15 ಹಿಂದೂ ಮುಖಂಡರಿಗೆ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕೋರಿ ಸಿದ್ರಾಮಯ್ಯ ಹಿರೇಮಠ ರಿಟ್‌ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್‌ಸಿಂಗ್‌ ಯೆರೂರ್‌ ಅವರ ಪೀಠವು, ಶಿವರಾತ್ರಿಯಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆ ಒಳಗೆ ಪೂಜೆ ಸಲ್ಲಿಸಲು ಅವಕಾಶ ನೀಡಿ ಆದೇಶಿಸಿದೆ.

ADVERTISEMENT

‘ಅರ್ಜಿದಾರರು ತಮ್ಮನ್ನೂ ಸೇರಿ 15 ಮಂದಿಗೆ ಶಿವಲಿಂಗ ಪೂಜೆಗೆ ಅವಕಾಶ ಕೋರಿದ್ದಾರೆ. ಆದರೆ, ಇತರ ಯಾರೊಬ್ಬರ ಹೆಸರನ್ನೂ ನೀಡಿಲ್ಲ. ಪೂಜಾ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಕದಡಬಲ್ಲಂಥ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲರಿಗೂ ಅನ್ವಯಿಸುವಂಥ ಆದೇಶ ನೀಡಲಾಗದು. ಈ ಹಂತದಲ್ಲಿ ಅರ್ಜಿದಾರರು ತಮ್ಮೊಬ್ಬರಿಗೆ ಪೂಜೆ ಸಲ್ಲಿಸುವ ಅವಕಾಶ ನೀಡುವುದಕ್ಕೂ ಸಮ್ಮತಿಸಿದ್ದಾರೆ’ ಎಂದು ಆದೇಶದಲ್ಲಿ ಹೇಳಿದ್ದಾರೆ.

ಅಲ್ಲದೇ, ‘ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಅರ್ಜಿದಾರರ ಹಾಗೂ ದರ್ಗಾದವರ ಸೇರಿದಂತೆ ಯಾವುದೇ ಕಡೆಯವರಿಂದ ಅಹಿತಕರ ಘಟನೆ ನಡೆದಂತೆ ತಡೆಯಲು ಸಂಬಂಧಿಸಿದ ಪೊಲೀಸರು ಸೂಕ್ತ ಭದ್ರತೆ ಹಾಗೂ ಅಗತ್ಯ ಕ್ರಮವಹಿಸಬೇಕು. ಕಾನೂನು ಸುವ್ಯವಸ್ಥೆ ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳಲು ಪೊಲೀಸರು ಅವಕಾಶವಿದೆ’ ಎಂದು ಪೀಠ ಸ್ಪಷ್ಟಪಡಿಸಿದೆ.

ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಪರವಾಗಿ ಹಿರಿಯ ನ್ಯಾಯವಾದಿ ಮಂಜುನಾಥ ಹಳವರ ವಾದ ಮಂಡಿಸಿದರು. ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವೈ.ಎಚ್.ವಿಜಯಕುಮಾರ, ಸಹಾಯಕರಾಗಿ ಹೆಚ್ಚುವರಿ ಸರ್ಕಾರಿ ವಕೀಲ ಮಲ್ಲಿಕಾರ್ಜುನ ಸಾಹುಕಾರ ಹಾಜರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.