ಜೇವರ್ಗಿ: ತಾಲ್ಲೂಕಿನಲ್ಲಿ ಕಳೆದ ಒಂದು ತಿಂಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಬಹುತೇಕ ಪ್ರಮುಖ ವಾಣಿಜ್ಯ ಬೆಳೆಗಳು ಸಂಪೂರ್ಣ ಹಾಳಾಗಿವೆ. ಇದರ ಜೊತೆಗೆ ಭೀಮಾ ನದಿ ಪ್ರವಾಹದಿಂದ ನದಿ ತೀರದ ಫಲವತ್ತಾದ ಜಮೀನುಗಳು ಜಲಾವೃತಗೊಂಡು ಫಸಲು ಮಣ್ಣು ಪಾಲಾಗಿದೆ. ಕೂಡಲೇ ಬೆಳೆ ಹಾನಿಗೀಡಾದ ರೈತರಿಗೆ ಹಾಗೂ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನೆಲೋಗಿ ವಲಯ ಘಟಕದ ವತಿಯಿಂದ ಗುರುವಾರ ಜೇರಟಗಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-50 ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ನೇತೃತ್ವ ವಹಿಸಿದ್ದ ನೆಲೋಗಿ ವಲಯ ಘಟಕದ ಅಧ್ಯಕ್ಷ ಯಲ್ಲಪ್ಪ ಬಂಕಲಗಿ ಮಾತನಾಡಿ, ತಾಲ್ಲೂಕಿನ ಅನೇಕ ಹಳ್ಳಿಗಳಲ್ಲಿ ನೂರಾರು ರೈತರ ಬೆಳೆಗಳು ಹಾಗೂ ಫಲವತ್ತಾದ ಜಮೀನು ಹಾಳಾಗಿದೆ. ಆದ್ದರಿಂದ ಬೆಳೆ ಹಾಗೂ ಜಮೀನು ಹಾನಿಗೀಡಾದ ರೈತರಿಗೆ ಪ್ರತಿ ಎಕರೆಗೆ ₹ 25 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಅಂಕಲಗಾ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ವಸತಿ ನಿಲಯ ಸ್ಥಾಪನೆ ಮಾಡಬೇಕು. ನೆಲೋಗಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಜೇರಟಗಿಗೆ ಸಮುದಾಯ ಆರೋಗ್ಯ ಕೇಂದ್ರ ಮಂಜೂರಾಗಿದ್ದು, ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಸಿದರಾಯ ಭೋಸಗಿ ಅವರು ಬೇಡಿಕೆ ಈಡೇರಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಗೋರಗುಂಡಗಿಯ ವರಲಿಂಗೇಶ್ವರ ಸ್ವಾಮೀಜಿ, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಶಿವಲಿಂಗ ಹಳ್ಳಿ ಸೊನ್ನ, ಮುಖಂಡರಾದ ಗುರುಪ್ರಸಾದ ಹುಲ್ಲೂರ, ಮಲ್ಲಿಕಾರ್ಜುನ ಬಿರಾದಾರ, ಸುರೇಶ ಬೇಲೂರ, ಶರಣಪ್ಪ ಜೇರಟಗಿ, ರಾಜು ಮುದ್ದಾ, ಪ್ರಭಾಕರ ಬಂಡಗಾರ, ಮಹೇಶ ಕೂಡಲಗಿ, ರಫೀಕ ಜೇರಟಗಿ, ರಮೇಶ ಯಾತನೂರ, ಚಿದಾನಂದ ಇಟಗಾ, ಕರವೇ ಕಾರ್ಯಕರ್ತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.