ಕಲಬುರಗಿ: ಎರಡನೇ ಬಾರಿಗೆ ಶಾಸಕಿಯಾಗಿ ಆಯ್ಕೆಯಾದ ಕನೀಜ್ ಫಾತಿಮಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ಅಧ್ಯಕ್ಷೆಯನ್ನಾಗಿ ನೇಮಕ ಮಾಡಿದ್ದಾರೆ.
ಆ ಮೂಲಕ ಮುಸ್ಲಿಂ ಸಮುದಾಯದ ಶಾಸಕಿಗೆ ಸ್ಥಾನಮಾನ ನೀಡಿದಂತಾಗಿದೆ. ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿಯಾಗಿ ಎರಡನೇ ಬಾರಿಗೆ ಕನೀಜ್ ಅವರು ಆಯ್ಕೆಯಾಗಿದ್ದರು. ಮೊದಲ ಅವಧಿಯಲ್ಲಿ ರಾಜ್ಯದಲ್ಲಿ ಅಲ್ಪ ಅವಧಿಗೆ ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿ ಇದ್ದುದರಿಂದ ಕನೀಜ್ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಎರಡನೇ ಬಾರಿಗೆ ಸಂಪೂರ್ಣ ಬಹುಮತ ಬಂದಿರುವ ಸಂದರ್ಭದಲ್ಲಿ ಅವರಿಗೆ ನಿಗಮ–ಮಂಡಳಿ ಹುದ್ದೆ ನೀಡುವ ಮೂಲಕ ಆ ಸಮುದಾಯಕ್ಕೆ ನ್ಯಾಯ ಒದಗಿಸಲು ತೀರ್ಮಾನಿಸಿ ಮುಖ್ಯಮಂತ್ರಿ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ.
ನಿಗಮದ ಅಧ್ಯಕ್ಷೆ ಹುದ್ದೆ ತಮಗೆ ಒಲಿದಿರುವ ಬಗ್ಗೆ ಮಾಹಿತಿ ಲಭಿಸಿದ್ದರೂ ಶಾಸಕಿ ಕನೀಜ್ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹುದ್ದೆ ಒಪ್ಪಿಕೊಳ್ಳಬೇಕೋ ಬೇಡವೋ ಎಂಬ ಬಗ್ಗೆ ಇದೇ 27ರಂದು ನಗರಕ್ಕೆ ಭೇಟಿ ನೀಡುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಅವರ ಸಲಹೆ ಪಡೆದ ಬಳಿಕವೇ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.