ADVERTISEMENT

ಏಪ್ರಿಲ್‌ ವೇಳೆಗೆ ಕೆಕೆಆರ್‌ಡಿಬಿಗೆ ಅಧ್ಯಕ್ಷರ ನೇಮಕ: ಗೋವಿಂದ ಎಂ.ಕಾರಜೋಳ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2020, 10:17 IST
Last Updated 28 ಫೆಬ್ರುವರಿ 2020, 10:17 IST
ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ
ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ   

ಕಲಬುರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಏಪ್ರಿಲ್‌1ರ ಒಳಗಾಗಿ ಅಧ್ಯಕ್ಷರ ನೇಮಕವಾಗಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಹೇಳಿದರು.

‘ಕೆಕೆಆರ್‌ಡಿಬಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್‌ ಸದಸ್ಯರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದ್ದು, ಪ್ರಸಕ್ತ ಅಧಿವೇಶನದಲ್ಲಿ ಸದನದ ಒಪ್ಪಿಗೆ ಪಡೆಯಲಾಗುತ್ತದೆ. ಆ ನಂತರ ನೇಮಕ ಪ್ರಕ್ರಿಯೆ ನಡೆಯಲಿದೆ’ ಎಂದುಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಅವರು ಅಧ್ಯಕ್ಷರಾಗಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವು ಈ ಭಾಗದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಲಿದ್ದು, ಇದಕ್ಕೆ ಪ್ರತ್ಯೇಕ ಅನುದಾನ ನೀಡುತ್ತೇವೆ’ ಎಂದರು.

ADVERTISEMENT

ತೊಗರಿ ಖರೀದಿ:‘ಸದ್ಯ 18.28 ಲಕ್ಷ ಟನ್‌ ತೊಗರಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಬೆಂಬಲ ಬೆಲೆಯಡಿ ಪ್ರತಿ ರೈತರಿಂದ 10 ಕ್ವಿಂಟಲ್ ಬದಲಾಗಿ 20 ಕ್ವಿಂಟಲ್ ತೊಗರಿ ಖರೀದಿ ಮಾಡಬೇಕು ಎಂದು ಮುಖ್ಯಮಂತ್ರಿ ಅವರು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಇದಕ್ಕೆ ಅನುಮೋದನೆ ಸಿಗುವ ನಿರೀಕ್ಷೆ ಇದೆ. ಸದ್ಯ ತೊಗರಿಗೆ ಕೇಂದ್ರ ಸರ್ಕಾರ ₹5,800 ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹಧನ ₹300 ಸೇರಿಸಿ ಪ್ರತಿ ಕ್ವಿಂಟಲ್‌ಗೆ ಒಟ್ಟಾರೆ₹6,100 ಬೆಂಬಲ ಬೆಲೆ ನೀಡಲಾಗುತ್ತಿದೆ’ ಎಂದು ಅವರು ಹೇಳಿದರು.

‘ಬೆಂಬಲ ಬೆಲೆಯಡಿ ಕಡಲೆ ಖರೀದಿಸುತ್ತಿದ್ದು, ರಾಜ್ಯ ಸರ್ಕಾರದಿಂದಲೂ ಪ್ರೋತ್ಸಾಹಧನ ನೀಡುವ ವಿಷಯವಾಗಿ ಸಂಪುಟದ ಉಪ ಸಮಿತಿಯ ಗಮನಕ್ಕೆ ತರುತ್ತೇನೆ’ ಎಂದು ಪ್ರತಿಕ್ರಿಯಿಸಿದರು.

‘ಬಂಧುಗಳಾಗಿ ಇರಬೇಕು’

‘ವಿಧಾನಸೌಧ ಮತ್ತು ರಾಜಕೀಯ ಕಣದಲ್ಲಿ ಪರಸ್ಪರ ವೈರಿಯಾಗಿ ಹೊರಾಡುವ ಜನಪ್ರತಿನಿಧಿಗಳು ರಾಜಕೀಯದ ಹೊರತಾಗಿ ಬಂಧುಗಳಂತೆ ಇರಬೇಕು’ ಎಂದು ಕಾರಜೋಳ ಆಶಿಸಿದರು.

‘ಬಿ.ಎಸ್‌.ಯಡಿಯೂರಪ್ಪ ಅವರ ಅಭಿನಂದನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದು ಉತ್ತಮ ಬೆಳವಣಿಗೆ. ರಾಜಕೀಯ ಹೊರತಾದ ವೈಯಕ್ತಿಕ ಮತ್ತು ಭಾವನಾತ್ಮಕ ಸಂಬಂಧ ರಕ್ತಸಂಬಂಧಕ್ಕಿಂತ ಗಟ್ಟಿಯಾಗಿರುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.