ಕಲಬುರ್ಗಿ: 'ಕಲಬುರ್ಗಿಯಲ್ಲಿ ಇಂದು ನಡೆಯಬೇಕಿರುವ ಲೋಕೋಪಯೋಗಿ ಇಲಾಖೆ ಎಇ ಪರೀಕ್ಷೆಗೆ ಹಾಜರಾಗಲು ದೂರದೂರುಗಳಿಂದ ಬರುತ್ತಿದ್ದ ವಿದ್ಯಾರ್ಥಿಗಳ ರೈಲು ಸುಮಾರು 5 ಗಂಟೆಗೂ ಹೆಚ್ಚು ಕಾಲ ವಿಳಂಬವಾಗಿದೆ. ಇದರಿಂದ ಸುಮಾರು 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಸಮಯಕ್ಕೆ ಸರಿಯಾಗಿ ಇನ್ನೂ ತಲುಪಲು ಆಗಿಲ್ಲಾ. ಕೂಡಲೇ ಸರ್ಕಾರ ಪರೀಕ್ಷೆಯನ್ನು ಮುಂದೂಡಲು ನಾನು ಆಗ್ರಹಿಸುತ್ತೇನೆ' ಎಂದು ಕೆಪಿಸಿಸಿ ವಕ್ತಾರ,ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ನಾನು ಈಗಾಗಲೇ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಚರ್ಚಿಸಿದ್ದು, ಅವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ 2,000ಕ್ಕೂ ಹೆಚ್ಚು ಮಕ್ಕಳ ಭವಿಷ್ಯ ತೂಗುಯ್ಯಾಲೆಯಲ್ಲಿರುವಾಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರಿಗೂ ಪರೀಕ್ಷೆ ಬರೆಯಲು ಅನುವುಮಾಡಿಕೊಡಬೇಕೆಂದು ಸರ್ಕಾರಕ್ಕೆ ವಿನಂತಿಸುತ್ತೇನೆ' ಎಂದಿದ್ದಾರೆ.
ಕೆಪಿಎಸ್ಸಿ ನಡೆಸುತ್ತಿರುವ ಲೋಕೋಪಯೋಗಿ ಇಲಾಖೆಯ ಎಇ ಪರೀಕ್ಷೆ ಬರೆಯುವುದಕ್ಕೆ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಕಲಬುರ್ಗಿ ತಲುಪಬೇಕಿದ್ದವರು, 9 ಗಂಟೆಯಾದರೂ ರಾಯಚೂರಿನಲ್ಲೇ ಉಳಿಯುವಂತಾಗಿದೆ. ರೊಚ್ಚಿಗೆದ್ದ ಉದ್ಯೋಗ ಅಕಾಂಕ್ಷಿಗಳೆಲ್ಲ ರಾಯಚೂರು ರೈಲ್ವೆ ನಿಲ್ದಾಣದಲ್ಲಿ ಹಾಸನ-ಸೋಲ್ಲಾಪುರ ರೈಲು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.