ಕಲಬುರ್ಗಿ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ ನಡೆಸಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿಯನ್ನು ಆಯಾ ತಾಲ್ಲೂಕಿನ ತಹಶೀಲ್ದಾರರ ಕಚೇರಿಗಳಲ್ಲಿ ಮತ್ತು ನಾಡ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಕರಡು ಪಟ್ಟಿಗೆ ಆಕ್ಷೇಪಗಳನ್ನು ಫೆ. 22ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಕ್ಷೇಪಗಳನ್ನು ಸಹಾಯಕ ಚುನಾವಣಾಧಿಕಾರಿಗಳಿಗೆ ಅಥವಾ ಚುನಾವಣಾಧಿಕಾರಿಗಳಿಗೆ ನಿಗದಿತ ಅವಧಿಯೊಳಗೆ ಸಲ್ಲಿಸಬೇಕು. ಮತದಾರರ ಅಂತಿಮ ಪಟ್ಟಿಯನ್ನು ಮಾರ್ಚ್ 25ರಂದು ಪ್ರಕಟಿಸಲಾಗುವುದು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ, ಜಿಲ್ಲಾ ಘಟಕಗಳ ಅಧ್ಯಕ್ಷರ, ಗಡಿನಾಡ ಘಟಕಗಳ ಅಧ್ಯಕ್ಷರ (ಕಾರ್ಯಕಾರಿ ಸಮಿತಿ ಸದಸ್ಯರ) ಚುನಾವಣೆ-2021ಕ್ಕೆ ಸಂಬಂಧಿಸಿದಂತೆ ಚುನಾವಣಾ ವೇಳಾಪಟ್ಟಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಹೊರಡಿಸಿದ್ದಾರೆ.
ಮತದಾರರ ಕರಡು ಪಟ್ಟಿ ಪ್ರಕಟಣೆಯನ್ನು ಫೆ. 8ರಂದು ಹೊರಡಿಸಿದ್ದು, 22ರೊಳಗೆ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಅಂತಿಮ ಪಟ್ಟಿಯನ್ನು ಮಾರ್ಚ್ 25ರಂದು ಪ್ರಕಟಿಸಲಾಗುತ್ತದೆ. ನಾಮಪತ್ರಗಳನ್ನು ಮಾರ್ಚ್ 29ರಿಂದ ಏಪ್ರಿಲ್ 7ರ ವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆ ವರೆಗೆ ಸಲ್ಲಿಸಬೇಕು. ಪರಿಶೀಲನಾ ಕಾರ್ಯ ಏ. 8ರಂದು ನಡೆಯಲಿದೆ. ಏ. 12ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಅವಕಾಶ.
ಅವಶ್ಯವಿದ್ದಲ್ಲಿ ಮತದಾನವನ್ನು ತಾಲ್ಲೂಕಿನ ಕೇಂದ್ರ ಸ್ಥಾನ ಮತ್ತು ಹಾಲಿ ಹೋಬಳಿ ಮತ ಕೇಂದ್ರಗಳಲ್ಲಿ ಮೇ 9ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ನಡೆಸಲಾಗುವುದು. ಮತ ಎಣಿಕೆ ಮತ್ತು ಚುನಾವಣಾ ಫಲಿತಾಂಶವನ್ನು ಮೇ 9ರಂದು ಪ್ರಕಟಿಸಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.