ಕಲಬುರ್ಗಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಹೊರಗುತ್ತಿಗೆ ನೌಕರರಿಗೆ 2019ರ ಫೆಬ್ರುವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಸಂಬಳವನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಕೂಡಲೇ ಬಾಕಿ ವೇತನ ನೀಡಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಹೊರಗುತ್ತಿಗೆ ನೌಕರರು ಮಂಗಳವಾರ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿ ತಿಂಗಳು 19ನೇ ತಾರೀಖಿನೊಳಗೆ ಸಂಬಳ ವಿತರಿಸಲು ಆದೇಶ ಮಾಡಬೇಕು. ಕಳೆದ 15–20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರ ಸೇವಾ ಭದ್ರತೆಯನ್ನು ನೀಡಬೇಕು ಮತ್ತು ಅವರನ್ನು ಅವಲಂಬಿಸಿರುವ ಕುಟುಂಬಗಳಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ, ಬೆಳಗಾವಿ ಮಹಾನಗರ ಪಾಲಿಕೆ, ಮಂಡ್ಯ ನಗರ ಸಭೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಯ ಸೇವೆಯನ್ನು ಕಾಯಂ ಸೇವೆಗೆ ಸಕ್ರಮಗೊಳಿಸುವ ಪ್ರಯುಕ್ತ ಪಾಲಿಕೆ ಸಭೆಯಲ್ಲಿ ವಿಷಯವನ್ನು ಮಂಡಿಸಿ ನಡವಳಿ ತಯಾರಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸಿರುವುದರಿಂದ ಈ ನಡವಳಿ ಆಧಾರದಲ್ಲಿ ಹೊರಗುತ್ತಿಗೆ ಸಿಬ್ಬಂದಿಯನ್ನು ಕಾಯಂ ಸೇವೆಗೆ ತೆಗೆದುಕೊಳ್ಳಬೇಕು ಎಂದರು.
ಸಂಘದ ಅಧ್ಯಕ್ಷ ಸುನೀಲ ಮಾನಪಡೆ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಬಕಿ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.