ಕಲಬುರಗಿ: ‘ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಸೆಪ್ಟೆಂಬರ್ 1ರಿಂದ ಡಿಸೆಂಬರ್ 31ರವರೆಗೆ 21ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯ ನಡೆಯಲಿದೆ’ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಜಾನುವಾರು ಗಣತಿಯ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
‘ಗಣತಿದಾರರು ನಗರ ಮತ್ತು ಗ್ರಾಮೀಣ ಭಾಗದ ಪ್ರತಿಯೊಂದು ಮನೆ, ಉದ್ಯಮ, ಸಂಸ್ಥೆಗಳಿಗೆ ಭೇಟಿ ನೀಡಿ ಎಲ್ಲಾ ತರಹದ ಸಾಕು ಪ್ರಾಣಿಗಳು ಹಾಗೂ ಕುಕ್ಕುಟಗಳ ಮಾಹಿತಿ ಸಂಗ್ರಹಿಸುವರು. ಇದಕ್ಕೆ ಸಾರ್ವಜನಿಕರು, ರೈತರು ಸಹಕರಿಸಬೇಕು’ ಎಂದು ಕೋರಿದರು.
‘ಜಿಲ್ಲೆಯಲ್ಲಿ 4.91 ಲಕ್ಷ ಮನೆಗಳಿಗೆ ಗಣತಿದಾರರು ಭೇಟಿ ನೀಡಲಿದ್ದಾರೆ. ಗಣತಿಗಾಗಿ 115 ಎಣಿಕೆದಾರರು ಹಾಗೂ 25 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಗೋವು, ಎಮ್ಮೆ, ಕುರಿ, ಕೋಳಿ, ನಾಯಿ, ಕುದರೆ, ಹಂದಿಗಳ ಮಾಹಿತಿಯನ್ನು ಕಲೆ ಹಾಕುವರು. ಗಣತಿಯಿಂದ ಜಾನುವಾರು ವಲಯ ಅಭಿವೃದ್ಧಿ, ನೀತಿ ನಿರೂಪಣೆ, ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ನೆರವಾಗಲಿದೆ’ ಎಂದು ಹೇಳಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿಸಿಪಿ ಕನಿಕಾ ಸಿಕ್ರಿವಾಲ್, ಸಹಾಯಕ ಆಯುಕ್ತರಾದ ರೂಪಿಂದರ್ ಸಿಂಗ್ ಕೌರ್, ಪ್ರಭುರೆಡ್ಡಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗದೇವಪ್ಪ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಸಿರಾಜ್ ಅಹಮದ್, ಡಾ.ಸುಭಾಷಚಂದ್ರ ಟಕ್ಕಳಗಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.