ADVERTISEMENT

ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ

ಕೃಷಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್‌ ಮೋಹನ ತಾಕೀತು

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2019, 10:26 IST
Last Updated 12 ನವೆಂಬರ್ 2019, 10:26 IST
ಕಲಬುರ್ಗಿಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಕಪಿಲ್‌ ಮೋಹನ್‌ ಮಾತನಾಡಿದರು
ಕಲಬುರ್ಗಿಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಕಪಿಲ್‌ ಮೋಹನ್‌ ಮಾತನಾಡಿದರು   

ಕಲಬುರ್ಗಿ: ‘ಪ್ರವಾಹ ಪರಿಸ್ಥಿತಿಯಿಂದಾಗಿ ರೈತರು ಈಗಾಗಲೇ ಹಾನಿ ಅನುಭವಿಸಿದ್ದಾರೆ. ಹಿಂಗಾರು ಹಂಗಾಮಿಗಾಗಿ ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್‌ ಮೋಹನ ಅವರು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಅವರು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಜಂಟಿ ಕೃಷಿ ನಿರ್ದೇಶಕ ರತೇಂದ್ರನಾಥ ಸೂಗುರ ಮಾತನಾಡಿ, ‘ರೈತರಿಗೆ ಅಗತ್ಯಕ್ಕ ತಕ್ಕ ಹಾಗೂ ಬೇಡಿಕೆ ಇರುವ ರಸಗೊಬ್ಬರಗಳ ದಾಸ್ತಾನು ಮಾಡಲಾಗಿದೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಪಿ.ರಾಜಾ ಅವರು, ‘ಮಳೆಯಿಂದ ಜಿಲ್ಲೆಯಲ್ಲಿ ಅಂತರ್ಜಲ ಪುನಶ್ಚೇತನಗೊಂಡಿದೆ. ಹಾಗಾಗಿಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿಲ್ಲ’ ಎಂದು ತಿಳಿಸಿದರು.

ವಾಡಿ-ಗದಗ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯ ಭೂಮಿ ಭೂಸ್ವಾಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳುವಂತೆ ಕಪಿಲ್‌ ಮೋಹನ್ ಕೆ.ಐ.ಎ.ಡಿ.ಬಿ. ಭೂ ಸ್ವಾಧೀನ ಅಧಿಕಾರಿಗಳಿಗೆ ನಿರ್ದೇಶನ ನೀಡದರು.

ಸದರಿ ರೈಲ್ವೆ ಯೋಜನೆಗೆ ಜಿಲ್ಲೆಯ ಜೇವರ್ಗಿ ಮತ್ತು ಚಿತ್ತಾಪುರ ತಾಲ್ಲೂಕಿನಲ್ಲಿ ಒಟ್ಟಾರೆ 296 ಎಕರೆ ಪ್ರದೇಶ ಭೂಸ್ವಾಧೀನಕ್ಕೆ ಗುರುತಿಸಿ, ಇದೂವರೆಗೆ 284 ಎಕರೆ ಪ್ರದೇಶ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ಸಂಬಂಧಿಸಿದ ರೈತರಿಗೆ ಹಣ ಪಾವತಿ ಮಾಡಲಾಗಿದೆ ಎಂದು ಕೆ.ಐ.ಎ.ಡಿ.ಬಿ. ಭೂಸ್ವಾಧೀನಾಧಿಕಾರಿ ಶರಣಪ್ಪ ಬಿ. ಮಾಹಿತಿ ನೀಡಿದರು.

‘ಜಿಲ್ಲೆಯ ಜಾನುವಾರುಗಳಿಗೆ 42 ವಾರಗಳಿಗೆ ಬೇಕಾಗುವಷ್ಟು ಮೇವು ಲಭ್ಯವಿದೆ ಎಂದು ಪಶುಪಾಲನಾ ಮತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಹನುಮಂತಪ್ಪ ಸಭೆಗೆ ತಿಳಿಸಿದರು.

ಜಿಲ್ಲಾಧಿಕಾರಿ ಶರತ್ ಬಿ., ಅಪರ ಜಿಲ್ಲಾಧಿಕಾರಿ ಡಾ.ಶಂಕರಪ್ಪ ವಣಿಕ್ಯಾಳ, ಪಾಲಿಕೆಯ ಆಯುಕ್ತ ರಾಹುಲ ಪಾಂಡ್ವೆ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.