ಕಲಬುರ್ಗಿ: ಕೇಂದ್ರ ಬಿಜೆಪಿ ಸರ್ಕಾರ ಅಡುಗೆ ಅನಿಲ ದರವನ್ನು ಪ್ರತಿ ಸಿಲಿಂಡರ್ ದರವನ್ನು ಏಕಾಏಕಿ ₹ 145ಕ್ಕೆ ಹೆಚ್ಚಿಸಿದ ಕ್ರಮವನ್ನು ಖಂಡಿಸಿ ವುಮೆನ್ ಇಂಡಿಯಾ ಮೂವ್ಮೆಂಟ್ ಸಂಘಟನೆಯ ಕಾರ್ಯಕರ್ತೆಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಈ ಹೆಚ್ಚಳದ ಮೂಲಕ ಸಬ್ಸಿಡಿ ರಹಿತ ಅಡುಗೆ ಅನಿಲ ದರ ₹ 697 ಇದ್ದುದು ₹ 842ಕ್ಕೆ ಏರಿಕೆಯಾದಂತಾಗಿದೆ. ಕೇಂದ್ರ ಸರ್ಕಾರದ ಈ ನಡೆಯಿಂದ ದೇಶದ ಹಿತಕ್ಕಾಗಿ ಸಬ್ಸಿಡಿ ತ್ಯಾಗ ಮಾಡಿದ ಗ್ರಾಹಕರಿಗೆ ಒಮ್ಮೆಲೇ ಚೂರಿ ಹಾಕುವ ಮೂಲಕ ₹ 145 ಹೆಚ್ಚುವರಿ ಹೊಡೆತ ಕೊಟ್ಟಿದೆ. 2014ರ ಬಳಿಕ ಅಡುಗೆ ಅನಿಲದ ಸಿಲಿಂಡರ್ ದರ ಗರಿಷ್ಠ ಮಟ್ಟದಲ್ಲಿ ಏರಿಕೆ ಕಂಡಂತಾಗಿದೆ. ಪ್ರಸ್ತುತ ದೇಶದ ಜನತೆ ನಿರುದ್ಯೋಗ ಹಾಗೂ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ ಎಲ್ಪಿಜಿ ದರ ಏರಿಕೆ ಮಾಡುವ ಮೂಲಕ ಮೋದಿ ಸರ್ಕಾರ ಜನತೆಗೆ ಆಘಾತವನ್ನುಂಟು ಮಾಡಿದೆ ಎಂದು ಟೀಕಿಸಿದರು.
ಪ್ರಸ್ತುತ ದೇಶದಲ್ಲಿ ಉಂಟಾಗಿರುವ ಆರ್ಥಿಕ ತುರ್ತುಪರಿಸ್ಥಿತಿಯನ್ನು ವಾಸ್ತವವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಕೊಂಡು ತಕ್ಷಣ ಅಡುಗೆ ಅನಿಲ ಏರಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ರೆಹಾನಾ ಬೇಗಂ, ಉಪಾಧ್ಯಕ್ಷೆ ಆಯೇಷಾ ಬಿ, ಸನಾ ಸುಲ್ತಾನಾ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.