ಕಲಬುರ್ಗಿ: ‘ಇಲಾಖೆಗಳಿಗೆ ನಿಗದಿ ಪಡಿಸಿರುವ ಅನುದಾನ ಬಳಕೆಯ ಪರಾಮರ್ಶೆ ಮತ್ತು ಪುನರ್ ಹಂಚಿಕೆಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಡಿ.13ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
‘ಮಾರ್ಚ್ 31ರ ವೇಳೆಗೆ ಅನುದಾನ ಬಳಸಲೇಬೇಕು. ಹಣ ಬಳಕೆಯಲ್ಲಿ ಹಿಂದೆ ಬಿದ್ದಿರುವ ಇಲಾಖೆಗಳಿಂದ ಅನುದಾನವನ್ನು ಕಡಿತ ಮಾಡಿ ಸಾಧನೆ ಮಾಡಿರುವ ಇಲಾಖೆಗಳಿಗೆ ಮರು ಹಂಚಿಕೆ ಮಾಡಲಾಗುವುದು’ ಎಂದು ಅವರು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಪುಟ ವಿಸ್ತರಣೆ: ‘ಮುಖ್ಯಮಂತ್ರಿ ಅವರು ದೆಹಲಿಗೆ ತೆರಳಿ ಪ್ರಧಾನಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ ನಂತರವೇ ಸಂಪುಟ ವಿಸ್ತರಣೆ ನಡೆಯಲಿದೆ. ಸಾಮಾಜಿಕ ಮತ್ತು ಪ್ರಾದೇಶಿಕತೆ ನ್ಯಾಯದ ಆಧಾರದ ಮೇಲೆ ಸಚಿವ ಸ್ಥಾನ ನೀಡಬೇಕಾಗುತ್ತದೆ. ಆ ಬಗ್ಗೆ ಹೈಕಮಾಂಡ್, ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಿದೆ’ ಎಂದು ಅವರು ಪ್ರತಿಕ್ರಿಯಿಸಿದರು.
‘ಉಪ ಮುಖ್ಯಮಂತ್ರಿ ಹುದ್ದೆ ರದ್ದು ವಿಷಯ ನನಗೆ ಗೊತ್ತಿಲ್ಲ. ಆದರೂ, ಪಕ್ಷ ಏನೇ ನಿರ್ಣಯ ಕೈಗೊಂಡರೂ ನಾನು ಬದ್ಧನಾಗಿರುತ್ತೇನೆ’ ಎಂದರು.
ತೊಗರಿ ಖರೀದಿ: ಸಭೆ ಇಂದು
ಬೆಂಬಲ ಬೆಲೆಯಡಿ ತೊಗರಿ ಖರೀದಿ ಕೇಂದ್ರಗಳನ್ನು ತಕ್ಷಣ ಆರಂಭಿಸುವುದು ಹಾಗೂ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ ನೀಡುವ ಪ್ರಮಾಣದ ಬಗ್ಗೆ ನಿರ್ಧರಿಸಲು ಡಿ.13ರಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
‘ಕೇಂದ್ರ ಸರ್ಕಾರ ತೊಗರಿಗೆ ₹5,800 ಬೆಂಬಲ ಬೆಲೆ ನಿಗದಿ ಪಡಿಸಿದೆ. ರೈತರ ನೆರವಿಗೆ ಬರುವುದು ನಮ್ಮ ಸರ್ಕಾರದ ಆದ್ಯತೆ. ಮಾರುಕಟ್ಟೆಯಲ್ಲಿ ಸದ್ಯ ಇರುವ ದರ ಮತ್ತು ರಾಜ್ಯ ಸರ್ಕಾರದಿಂದ ಎಷ್ಟು ಪ್ರಮಾಣದ ಪ್ರೋತ್ಸಾಹಧನ ನೀಡಬೇಕು ಎಂಬ ನಿರ್ಧಾರವನ್ನು ಸಭೆಯಲ್ಲಿ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.