ADVERTISEMENT

ಒಂದೆರಡು ದಿನದಲ್ಲಿ ಶಾಸಕ ಉಮೇಶ ಜಾಧವ ರಾಜೀನಾಮೆ ಸಾಧ್ಯತೆ: ಸಹೋದರ ರಾಮಚಂದ್ರ ಜಾಧವ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2019, 9:06 IST
Last Updated 12 ಫೆಬ್ರುವರಿ 2019, 9:06 IST
ಡಾ.ಉಮೇಶ ಜಾಧವ
ಡಾ.ಉಮೇಶ ಜಾಧವ   

ಕಲಬುರ್ಗಿ: ‘ಚಿಂಚೋಳಿ ಶಾಸಕ ಡಾ.ಉಮೇಶ ಜಾಧವ ಅವರು ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದು, ಒಂದೆರಡು ದಿನದಲ್ಲಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ’ ಎಂದು ಉಮೇಶ ಸಹೋದರ ರಾಮಚಂದ್ರ ಜಾಧವ ಇಲ್ಲಿ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಮೇಶ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಬರುವ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಅನಿಸುತ್ತದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಕಲಬುರ್ಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬಹುದು. ಒಂದೊಮ್ಮೆ ಸ್ಪರ್ಧಿಸಿದರೆ ಗೆಲುವು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಮಚಂದ್ರ ಜಾಧವ

‘ಚಿಂಚೋಳಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಹೀಗಾಗಿ ಅವರಿಗೆ ಬೇಸರವಾಗಿದೆ. ಸರ್ಕಾರ ಬೀಳುವುದಕ್ಕೂ, ಉಮೇಶ ರಾಜೀನಾಮೆಗೂ ಸಂಬಂಧವಿಲ್ಲ. ಅವರು ಬೇರೆ ಕಾರಣಕ್ಕಾಗಿ ಪಕ್ಷದಿಂದ ಹೊರಬರುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ರಾಜೀನಾಮೆ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ಸದ್ಯ ಅವರು ಬೆಂಗಳೂರಿನಲ್ಲೇ ಇದ್ದಾರೆ. ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದಾರೆ. ಅವರ ಸಲಹೆ ಮೇರೆಗೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಇಂದು ಸಂಜೆಯೇ ರಾಜೀನಾಮೆ ಕೊಟ್ಟರೂ ಕೊಡಬಹುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಫೆ.15ರಂದು ಕಲಬುರ್ಗಿಯಲ್ಲಿ ಸೇವಾಲಾಲ ಜಯಂತಿ ಆಚರಿಸಲಾಗುತ್ತಿದ್ದು, ಆ ಕಾರ್ಯಕ್ರಮದಲ್ಲಿ ಉಮೇಶ ಪಾಲ್ಗೊಳ್ಳಲಿದ್ದಾರೆ. ಅದಕ್ಕೂ ಮುಂಚೆಯೇ ರಾಜೀನಾಮೆ ಸಲ್ಲಿಸಬಹುದು ಅಥವಾ ಜಯಂತಿ ಬಳಿಕವೂ ಸಲ್ಲಿಸಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.