ADVERTISEMENT

ಸಿ.ಎಂ. ಮಾತಿಗೆ ಬೆಲೆಕೊಟ್ಟ ತೆಲ್ಕೂರ: ಇಂದು ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 16:34 IST
Last Updated 6 ಸೆಪ್ಟೆಂಬರ್ 2020, 16:34 IST

ಕಲಬುರ್ಗಿ: ತಮಗೆ ನೀಡಲಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ಹಿಂಜರಿದಿದ್ದ ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಧಾನದ ಬಳಿಕ ಇದೇ 7ರಂದು ಹುದ್ದೆಯ ಕಾರ್ಯಭಾರ ವಹಿಸಿಕೊಳ್ಳಲು ಒಪ್ಪಿದ್ದಾರೆ.

ತೆಲ್ಕೂರ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದರು. ಆದರೆ, ಆ ಸ್ಥಾನ ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ಪಾಲಾಗಿತ್ತು. ಇದರಿಂದ ಮುನಿಸಿಕೊಂಡಿದ್ದ ತೆಲ್ಕೂರ, ಎನ್‌ಇಕೆಆರ್‌ಟಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ಆರಂಭದಲ್ಲಿ ನಿರಾಕರಿಸಿದ್ದರು. ಶನಿವಾರ ತೆಲ್ಕೂರ ಅವರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಖುದ್ದು ಉಪಮುಖ್ಯಮಂತ್ರಿಗಳೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರನ್ನು ಕಳಿಸಿಕೊಡುವುದಾಗಿ ಹೇಳಿದರು. ಅದರಂತೆ ಸವದಿ ಅವರು ಅಂದು ಬೆಳಿಗ್ಗೆ 10.30ಕ್ಕೆ ಅಥಣಿಯಿಂದ ಬರಲಿದ್ದು, ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT