ಸೇಡಂ: ‘ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನನ್ನ ಸಹೋದರ ನಾಗಮಲ್ಲಿನಾಥ ಕಿರಣಗಿ ಮೇಲೆ ಹಲ್ಲೆ ನಡೆದು 3 ದಿನಗಳು ಕಳೆದರೂ ಈವರೆಗೆ ಆರೋಪಿಗಳನ್ನು ಬಂಧಿಸದೆ ಸಿಪಿಐ ಹಾಗೂ ಪಿಎಸ್ಐ ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಸಾಮಾಜಿಕ ಕಾರ್ಯಕರ್ತ ನಾಗರಾಜ ಕಿರಣಗಿ ಆರೋಪಿಸಿದರು.
ಬುಧವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವ್ಯಾಪಾರ ಮಾಡಿ ಜೀವ ಸಾಗಿಸುತ್ತಿರುವ ನಾಗಮಲ್ಲಿನಾಥ ಶಿವಶರಣಪ್ಪ ಕಿರಣಗಿ ಮೇಲೆ ಮೇ 15ರಂದು ಸಿದ್ದರಾಮಪ್ಪ ವೀರಭದ್ರಪ್ಪ ನೀಲಂಗಿ ಹಾಗೂ ಅವರ ಪುತ್ರ ವೀರೇಶ ಹಾಗೂ ಇತರರು ಮಾರಣಾಂತಿಕ ಹಲ್ಲೆ ನಡೆಸಿದ್ದು ಸೇಡಂ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಸದ್ಯ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಿಳಿಸಿದರು.
‘ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸೇಡಂ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸದೆ
ಕರ್ತವ್ಯ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ, ಘಟನಾ ಸ್ಥಳದಲ್ಲಿ ಇರದ ಅವರ ಪುತ್ರ ಶರಣು ಮೇಲೆ ಪ್ರತಿ ದೂರು ದಾಖಲಿಸಿಕೊಂಡು ಆರೋಪಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಮಾರಣಾಂತಿಕ ಹಲ್ಲೆ ನಡೆದರೂ ಕೊಲೆ ಯತ್ನ ಸೆಕ್ಷನ್ 307 ಪ್ರಕರಣ ದಾಖಲಿಸಿಲ್ಲ. ಸಿದ್ದರಾಮಪ್ಪ ನೀಲಂಗಿ ಕುರಿತು ಏಪ್ರಿಲ್ 17ರಂದೇ ದೂರು ನೀಡಿದರೂ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಈಗ ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುವಂತಾಗಿದೆ’ ಎಂದು ದೂರಿದರು.
‘ಈ ಬಗ್ಗೆ ಸಮಗ್ರ ಮಾಹಿತಿ ಪಡೆದು ಸೂಕ್ತ ನ್ಯಾಯಕೊಡಿಸಬೇಕು’ ಎಂದು ಒತ್ತಾಯಿಸಿ ಮುಖ್ಯಮಂತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಅವರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.