ADVERTISEMENT

ಸಂಶೋಧನೆಯ ಗುಣ ಅಳವಡಿಸಿಕೊಳ್ಳಿ: ಡಾ. ಜಾಧವ

ವಿ.ಟಿ.ಯು ಪ್ರಾದೇಶಿಕ ಕಚೇರಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಡಾ. ಜಾಧವ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 5:14 IST
Last Updated 8 ಮಾರ್ಚ್ 2021, 5:14 IST
ವಿಟಿಯು ಪ್ರಾದೇಶಿಕ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಗೆ ಸಂಸದ ಡಾ. ಉಮೇಶ ಜಾಧವ ಚಾಲನೆ ನೀಡಿದರು. ಡಾ.ಶರಣಬಸಪ್ಪ ಹರವಾಳ, ಎಚ್‌ಕೆಸಿಸಿಐ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ, ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ, ವಿಟಿಯು ಪ್ರಾದೇಶಿಕ ನಿರ್ದೇಶಕ ಪ್ರೊ. ಬಸವರಾಜ ಗಾದಗೆ ಇದ್ದರು
ವಿಟಿಯು ಪ್ರಾದೇಶಿಕ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಗೆ ಸಂಸದ ಡಾ. ಉಮೇಶ ಜಾಧವ ಚಾಲನೆ ನೀಡಿದರು. ಡಾ.ಶರಣಬಸಪ್ಪ ಹರವಾಳ, ಎಚ್‌ಕೆಸಿಸಿಐ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ, ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ, ವಿಟಿಯು ಪ್ರಾದೇಶಿಕ ನಿರ್ದೇಶಕ ಪ್ರೊ. ಬಸವರಾಜ ಗಾದಗೆ ಇದ್ದರು   

ಕಲಬುರ್ಗಿ: ‘ಸೋಲು ಗೆಲುವಿನ ಮೊದಲ ಮೆಟ್ಟಿಲು. ಹೀಗಾಗಿ ನಿರಂತರ ಅಧ್ಯಯನ, ಸಂಶೋಧನೆಯ ಗುಣ ಅಳವಡಿಸಿಕೊಳ್ಳವುದು ವಿದ್ಯಾರ್ಥಿ ಜೀವನಕ್ಕೆ ಅಗತ್ಯ’ ಎಂದು ಸಂಸದ ಡಾ.ಉಮೇಶ ಜಾಧವ ಅಭಿಪ್ರಾಯಪಟ್ಟರು.

ಭಾನುವಾರ ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರ್ಗಿ ಪ್ರಾದೇಶಿಕ ಕಚೇರಿಯಲ್ಲಿ ವಿ.ಟಿ.ಯು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತು, ಐಎಸ್‌ಟಿಇ ಹಾಗೂ ಐಇಟಿಇ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕೋವಿಡ್–19 ವಿರುದ್ಧದ ಹೋರಾಟಕ್ಕಾಗಿ ವ್ಯಾಕ್ಸಿನ್ ಕಂಡುಹಿಡಿಯಲು ಇಡೀ ಜಗತ್ತೇ ಶ್ರಮಿಸುತ್ತಿದ್ದಾಗ, ಭಾರತವು ತೀವ್ರ ಒತ್ತಡದ ನಡುವೆ ಕಡಿಮೆ ಅವಧಿಯಲ್ಲಿ ಅತ್ಯಂತ ಪರಿಣಾಮಕಾರಿ ವ್ಯಾಕ್ಸಿನ್ ಸಂಶೋಧಿಸಿದೆ. ಈ ಶ್ರೇಯಸ್ಸು ನಮ್ಮ ವಿಜ್ಞಾನಿಗಳಿಗೆ ಸಲ್ಲಬೇಕು. ಹಲವು ವೈಜ್ಞಾನಿಕ ಕ್ರಾಂತಿಗೆ ಭಾರತದ ವಿಜ್ಞಾನಿಗಳು ಸಾಕ್ಷಿಯಾಗಿದ್ದಾರೆ’ ಎಂದರು.

ADVERTISEMENT

ಪ್ರಸ್ತುತ ವಿಜ್ಞಾನ, ತಂತ್ರಜ್ಞಾನ ಸಾಕಷ್ಟು ಮುಂದುವರಿದಿದ್ದು, ವಿದ್ಯಾರ್ಥಿಗಳು ಎಂಜಿನಿಯರ್, ಡಾಕ್ಟರ್ ಆಗಲು ಬಯಸುವುದು ತಪ್ಪಲ್ಲ. ಆದರೆ, ಹಣಕ್ಕಿಂತ ಸಮಯಕ್ಕೆ ಹೆಚ್ಚು ಒತ್ತುಕೊಟ್ಟು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಂಸದ ಡಾ.ಜಾಧವ ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ ಮಾತನಾಡಿ, ‘ಜೀವ ವಿಜ್ಞಾನ, ಸಾಮಾಜಿಕ ಅಭಿವೃದ್ಧಿ, ಸಂಶೋಧನಾತ್ಮಕ, ಆಧುನಿಕ ತಂತ್ರಜ್ಞಾನ ವಿಷಯಗಳ ಬಗ್ಗೆ ಮೌಲ್ಯಯುತ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವುದು ಅಗತ್ಯವಾಗಿದೆ. ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕಿರುವುದು ಇಂದಿನ ಅವಶ್ಯಕ’ ಎಂದು ಹೇಳಿದರು.

ಭಾಗವಹಿಸಿದ್ದ ನಾಸಾ ಸಂಸ್ಥೆಯ ಮಾಜಿ ವಿಜ್ಞಾನಿ ನಾರಾಯಣ ಇನಾಮದಾರ ‘ಶಾಂತಿ ಮತ್ತು ಅಭಿವೃದ್ಧಿಗಾಗಿ ವಿಜ್ಞಾನ’ ಎಂಬ ವಿಷಯ ಕುರಿತು ಮಾತನಾಡಿದರು.

ವಿಧಾನ ಪರಿಷತ್ ಶಾಸಕ ಶಶೀಲ್ ನಮೋಶಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಭೀಮಾಶಂಕರ ಬಿಲಗುಂದಿ, ಉಪಾಧ್ಯಕ್ಷ ಡಾ. ಶರಣಬಸಪ್ಪ ಹರವಾಳ, ವಿ.ಟಿ.ಯು. ಪ್ರಾದೇಶಿಕ ನಿರ್ದೇಶಕ ಡಾ.ಬಸವರಾಜ ಗಾದಗೆ, ಪ್ರೊ. ಎಂ.ಎಸ್. ಜೋಗದ, ಪ್ರೊ.ಶಂಭುಲಿಂಗಪ್ಪ ಬಿ., ವಿಟಿಯುನ ಭೋದಕ–ಬೋಧಕೇತರ ಸಿಬ್ಬಂದಿ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.