ಆಳಂದ: ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ಭಾನುವಾರ ನಡೆದಿದೆ.
ಸಂಜೆ ಕೆಲವರಿಗೆ ವಾಂತಿ ಭೇದಿಯಾಗಿದೆ. ನಂತರ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ.
ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸುಶೀಲಕುಮಾರ ಅಂಬೂರೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಗ್ರಾಮ ಪಂಚಾಯಿತಿಯವರು ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛ ಮಾಡದ ಕಾರಣ ಈ ಘಟನೆ ನಡೆದಿದೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
‘ನೀರು ಸರಬರಾಜು ಮಾಡುವ ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಜನರು ಕಲುಷಿತ ನೀರು ಕುಡಿಯಬೇಕಾದ ಪರಿಸ್ಥಿತಿ ಬಂದಿದೆ. ಕಾಲರಾ, ಕಾಮಲೆ ಹಾಗೂ ಮತ್ತಿತರ ರೋಗಗಳು ಬಂದರೆ ಗ್ರಾಮ ಪಂಚಾಯಿತಿಯೇ ಹೊಣೆ’ ಎಂದು ನಿವಾಸಿ ಭೀಮಣ್ಣಾ ನಿಂಬರ್ಗಾ ಹೇಳಿದರು.
ತಾ.ಪಂ. ಇಒ ಮಾನಪ್ಪ ಕಟ್ಟಿಮನಿ ಮಾತನಾಡಿ,‘ವಾರಕ್ಕೊಮ್ಮೆ ನೀರಿನ ಟ್ಯಾಂಕ್ ಸ್ವಚ್ಛ ಮಾಡಬೇಕು. ಬ್ಲೀಚಿಂಗ್ ಪೌಡರ್ ಬಳಕೆ ಮಾಡಬೇಕು. ಇಂಥ ಘಟನೆ ಮರುಕಳಿಸಿದರೆ ಪಿಡಿಒ ಅವರನ್ನೇ ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.