ಅಫಜಲಪುರ: ಧಾರ್ಮಿಕ ತಾಣವಾದ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿಗೆ ಅಗತ್ಯವಾದ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದರು.
ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನಕ್ಕೆ ಸೋಮವಾರ ಪತ್ನಿ ಸಮೇತ ಭೇಟಿ ನೀಡಿದ ಅವರು, ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.
ನಂತರ ಮಾತನಾಡಿ, ‘ದತ್ತ ದೇವಸ್ಥಾನದ ಮೂಲ ಸೌಕರ್ಯಗಳಿಗೆ ಅನುದಾನ ನೀಡಲಾಗುವುದು. ಇದರ ಜತೆಗೆ ಉತ್ತಮ ರಸ್ತೆ ಸಂಪರ್ಕ ಸಹ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.
ಗಾಣಗಾಪುರದಿಂದ ಚವಡಾಪೂರ ವರೆಗೆ 6 ಕಿ.ಮೀ ರಸ್ತೆ, ಕಲಬುರಿಗೆ ಮಾರ್ಗದ 40 ಕಿ.ಮೀ ರಸ್ತೆ, ಸ್ಟೇಷನ್ ಗಾಣಗಾಪುರ, ಕಲ್ಮೇಶ ಹಾಗೂ ಸಂಗಮದವರೆಗಿನ ರಸ್ತೆಗಳ ವಿಸ್ತರಣೆ ಹಾಗೂ ಉತ್ತಮ ರಸ್ತೆ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಸಚಿವರಿಗೆ ಮನವಿ ಸಲ್ಲಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಸಾಲಕಾರಿ ಕಾರ್ಯದರ್ಶಿ ಪ್ರಿಯಾಂಕಾ ಪೂಜಾರಿ ಅವರು ಪೂಜೆ ನೆರವೇರಿಸಿದರು.
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮುತ್ತಿಮೂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ನಿಂಗದಳ್ಳಿ, ತಾಲ್ಲೂಕು ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಪಾದ ಮಾಳಗೆ, ಮುಖಂಡರಾದ ದಿಗಂಬರ ಕರಜಗಿ, ಮಹಾದೇವ ಬಳಗುಂಪಿ, ಯಲ್ಲಪ್ಪ ಮುದಕಣ, ಭಾಗಪ್ಪ ಮೈನಾಳ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.