ಕಲಬುರ್ಗಿ: ಜಿಲ್ಲೆಯ 740 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಇನ್ನೂ ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಒಪ್ಪಿಕೊಂಡಿದೆ.
ಈ ಕುರಿತು ವಿಧಾನಪರಿಷತ್ ಸದಸ್ಯ ಸುನೀಲ ವಲ್ಯಾಪುರೆ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರು ಲಿಖಿತ ಉತ್ತರ ನೀಡಿದ್ದು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಂದ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕಾಗಿದೆ. ಈ ಗ್ರಾಮಗಳಲ್ಲಿ ಸುಸ್ಥಿರ ಜಲಮೂಲದ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜಿಲ್ಲೆಗೆ ಸಮಗ್ರ ಯೋಜನೆಯನ್ನು ರೂಪಿಸಿ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೀದರ್ ಜಿಲ್ಲೆಯ 571 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕಾಗಿದ್ದು, ಪ್ರಸಕ್ತ ಸಾಲಿನಲ್ಲಿ ಮೂರು ಹೊಸ ಯೋಜನೆಗಳಿಂದ 55 ಗ್ರಾಮಗಳಿಗೆ ಶುದ್ಧ ನೀರು ಒದಗಿಸಲು ಉದ್ದೇಶಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ.
ರಾಯಚೂರು ಜಿಲ್ಲೆಯ 739 ಗ್ರಾಮಗಳಿಗೆ ಶುದ್ಧ ನೀರನ್ನು ಒದಗಿಸಬೇಕಾಗಿದ್ದು, ಜಲಧಾರೆ ಯೋಜನೆ ಅನುಮೋದನೆಗೊಂಡಿದ್ದು, ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಪಿಎಸ್ಆರ್ ತಯಾರಿಕೆ ಹಂತದಲ್ಲಿದೆ ಎಂದಿದ್ದಾರೆ.
ಕೊಪ್ಪಳ ಜಿಲ್ಲೆಯ 84 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕಾಗಿದ್ದು, ಅದಕ್ಕಾಗಿ ಐದು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಒಟ್ಟು 1841 ಜನವಸತಿ ಪ್ರದೇಶಗಳಲ್ಲಿ ನೀರು ಫ್ಲೋರೈಡ್ ಹಾಗೂ ರಾಸಾಯನಿಕಗಳಿಂದ ಕಲುಷಿತಗೊಂಡಿದೆ. ಮೂರು ವರ್ಷಗಳಲ್ಲಿ ಈ ಜನವಸತಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ವಲ್ಯಾಪುರೆ ಅವರ ಪ್ರಶ್ನೆಗೆ ಈಶ್ವರಪ್ಪ ಅವರು ಉತ್ತರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.