ಕಲಬುರ್ಗಿ: ಆಳಂದ ತಾಲ್ಲೂಕಿನ ಹೀರೊಳ್ಳಿ ಚೆಕ್ಪೋಸ್ಟ್ನಲ್ಲಿ ಹೊರ ರಾಜ್ಯದಿಂದ ಬರುವ ಪ್ರಯಾಣಿಕರಿಂದ ಸೇವಾಸಿಂಧು ತಂತ್ರಾಂಶದಲ್ಲಿ ನೋಂದಣಿ ಮಾಡಲು ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ, ತಡಕಲ್ ಗ್ರಾಮ ಲೆಕ್ಕಾಧಿಕಾರಿ ಮಲ್ಲಿನಾಥ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಂದ ನೋಂದಣಿ ಮಾಡಿಕೊಳ್ಳದೆ ಆಗಮಿಸುವ ವಲಸೆ ಕಾರ್ಮಿಕರಿಗೆ ಸೇವಾ ಸಿಂಧು ತಂತ್ರಾಂಶದಲ್ಲಿ ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಲು ಇವರನ್ನು ನಿಯೋಜಿಸಲಾಗಿತ್ತು. ಇವರು ಅಲ್ಲಿನ ಪ್ರಯಾಣಿಕರಲ್ಲಿ ಹಣ ವಸೂಲು ಮಾಡುತ್ತಿರುವ ಬಗ್ಗೆ ಪ್ರಯಾಣಿಕರು ಧ್ವನಿ ಮುದ್ರಣದೊಂದಿಗೆ ದೂರು ನೀಡಿದ್ದರು. ಅದನ್ನು ಪರೀಶಲಿಸಿ ಅಮಾನತು ಆದೇಶ ಹೊರಡಿಸಲಾಗಿದೆ ಎಂದು ಕಲಬುರ್ಗಿ ಸಹಾಯಕ ಆಯುಕ್ತರು ತಿಳಿಸಿದ್ದಾರೆ.
ನೌಕರರು ಅಮಾನತಿನ ಅವಧಿಯಲ್ಲಿ ನಿಯಮಾನುಸಾರ ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ. ಇನ್ನೂ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ನೌಕರರಿಗೆ ಆದೇಶದಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.