ADVERTISEMENT

ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಜಿಮ್ಸ್‌ ಉಸ್ತುವಾರಿಗೆ ನೋಡಲ್ ಅಧಿಕಾರಿ ನೇಮಕಕ್ಕೆ ಆಗ್ರಹ; ಗ್ರಾಮಗಳಲ್ಲಿ ಉತ್ತಮ ವೈದ್ಯಕೀಯ ಸೇವೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಮೇ 2021, 15:17 IST
Last Updated 18 ಮೇ 2021, 15:17 IST
ಕಲಬುರ್ಗಿ ಜಿಲ್ಲೆಯಲ್ಲಿ ಉತ್ತಮ ವೈದ್ಯಕೀಯ ಸೇವೆ ಕಲ್ಪಿಸಲು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಆನ್‌ಲೈನ್ ಪ್ರತಿಭಟನೆ ನಡೆಸಿದರು
ಕಲಬುರ್ಗಿ ಜಿಲ್ಲೆಯಲ್ಲಿ ಉತ್ತಮ ವೈದ್ಯಕೀಯ ಸೇವೆ ಕಲ್ಪಿಸಲು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಆನ್‌ಲೈನ್ ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಗಳನ್ನು ಸರಿಪಡಿಸಬೇಕು. ಜಿಲ್ಲೆಯಾದ್ಯಂತ ಎಲ್ಲ ತಾಲ್ಲೂಕು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳು, ವೈದ್ಯರು, ನರ್ಸ್‌ಗಳನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಸೋಮವಾರ ಆನ್‌ಲೈನ್‌ ಪ್ರತಿಭಟನೆ ನಡೆಸಿ ನಂತರ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರಿಗೆ ಇ ಮೇಲ್ ಮೂಲಕ ಮನವಿ ಸಲ್ಲಿಸಿದರು.

ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ–ಕಮ್ಯುನಿಸ್ಟ್), ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ), ರಾಜೀವಗಾಂಧಿ ಪಂಚಾಯತರಾಜ್ ಸಂಘಟನೆ ಹಾಗೂ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದಿ) ಹಾಗೂ ದಲಿತ ಸಂಘರ್ಷ ಸಮಿತಿಗಳ ಸಹಯೋಗದಲ್ಲಿ ಈ ಪ್ರತಿಭಟನೆ ನಡೆಯಿತು.

ಸಂಘಟನೆಯ ಮುಖಂಡರು ಫೇಸ್‌ಬುಕ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದವಿವಿಧ ಪಕ್ಷ, ಸಂಘಟನೆಗಳ ಮುಖಂಡರಾದ ಶೌಕತ್ ಅಲಿ ಆಲೂರು, ಅರ್ಜುನ್ ಭದ್ರೆ, ಎಚ್.ವಿ. ದಿವಾಕರ್, ಭೀಮಶಂಕರ್ ಮಾಡಿವಾಳ, ರಮೇಶ ನೀಲೂರ್ , ‘ಜಿಮ್ಸ್ ಆಸ್ಪತ್ರೆಯಲ್ಲಿ ಸರಿಯಾಗಿ ರೋಗಿಗಳನ್ನು ನೋಡಿಕೊಳ್ಳುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳನ್ನು ಹುಡುಕಿ ಬರುವ ಬಡವರಿಗೆ ಉತ್ತಮ ಚಿಕಿತ್ಸೆ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಆಮ್ಲಜನಕ, ವೆಂಟಿಲೇಟರ್, ಇಂಜೆಕ್ಷನ್ ಸೇರಿದಂತೆ ಪ್ರಾಣ ರಕ್ಷಣೆಗೆ ಔಷಧಿಗಳು ಸಮಯಕ್ಕೆ ಸರಿಯಾಗಿ ನೀಡುತ್ತಿಲ್ಲ. ವೈದ್ಯರು ಮತ್ತು ಜಿಮ್ಸ್ ನಿರ್ದೇಶಕಿ ಮಧ್ಯೆ ಗುಂಪುಗಾರಿಕೆ ಇರುವುದರಿಂದ ರೋಗಿಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಇಂತಹ ವ್ಯವಸ್ಥೆಯ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಜೇಮ್ಸ್ ನಲ್ಲಿ ಬಡವರ ಜೀವಗಳನ್ನು ಉಳಿಸಲು ಮುಂದಾಗಬೇಕು. ಜಿಮ್ಸ್ ಮುಖ್ಯದ್ವಾರದಲ್ಲಿ ನಿಯೋಜಿಸಿರುವ ಬೌನ್ಸರ್‌ಗಳನ್ನು ತೆಗೆದು ಪೊಲೀಸ್ ಸಿಬ್ಬಂದಿಯನ್ನು ನೇಮಿಸಬೇಕು ಮತ್ತು ಹಿರಿಯ ಅಧಿಕಾರಿಯನ್ನು ಉಸ್ತುವಾರಿ ನೋಡಿಕೊಳ್ಳಲು ನೇಮಿಸಬೇಕು’ ಎಂದರು.

ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಜಾರಿಗೆ ತಂದಿರುವ ಉಚಿತ ಚಿಕಿತ್ಸೆಯಂತೆ ಕರ್ನಾಟಕದಲ್ಲಿ ಜಾರಿಗೆ ತರಬೇಕು. ತಾಲ್ಲೂಕು ಮಟ್ಟದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಮತ್ತು ವೆಂಟಿಲೇಟರ್ ಸೇರಿದಂತೆ ಇತರ ಮೂಲಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರು.

ಮುಖಂಡರಾದ ಎಸ್‌.ಎಂ. ಶರ್ಮಾ, ರಾಘವೇಂದ್ರ ಗುರಜಾಳಕರ್, ಈರಣ್ಣ ಇಸಬಾ, ರಾಧಾ, ಸ್ನೇಹಾ ಕಟ್ಟಿಮನಿ, ಗೌರಮ್ಮ, ಶಿಲ್ಪಾ ಬಿ.ಕೆ ಸೇರಿದಂತೆ ಜಿಲ್ಲೆಯ ವಿವಿಧ ಪಟ್ಟಣ, ಗ್ರಾಮಗಳಿಂದ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.