ADVERTISEMENT

ಅತ್ಯಾಚಾರಿಗಳ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯ

ಎಐಡಿಎಸ್‌ಓ, ಎಐಡಿವೈಓ, ಎಐಎಂಎಸ್‌ಎಸ್‌ ಸಂಘಟನೆಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2021, 0:58 IST
Last Updated 27 ಆಗಸ್ಟ್ 2021, 0:58 IST
ಅತ್ಯಾಚಾರ ಮಾಡಿರುವ ಅಪರಾಧಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಲಬುರ್ಗಿಯ ಎಸ್‌.ವಿ.ಪಿ ವೃತ್ತದ ಬಳಿ ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   –ಪ್ರಜಾವಾಣಿ ಚಿತ್ರ
ಅತ್ಯಾಚಾರ ಮಾಡಿರುವ ಅಪರಾಧಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಲಬುರ್ಗಿಯ ಎಸ್‌.ವಿ.ಪಿ ವೃತ್ತದ ಬಳಿ ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   –ಪ್ರಜಾವಾಣಿ ಚಿತ್ರ   

ಕಲಬುರ್ಗಿ: ‘ಮೈಸೂರಿನ ಹೊರವಲಯದ ಚಾಮುಂಡಿ ಬೆಟ್ಟದ ಬಳಿ ಯುವತಿ ಮೇಲೆ ಗುಂಪು ಅತ್ಯಾಚಾರ ನಡೆಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ), ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಎಐಡಿವೈಒ) ಹಾಗೂ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್‌) ಕಾರ್ಯಕರ್ತರು ನಗರದ ಎಸ್‌ವಿಪಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಮೈಸೂರಿನಲ್ಲಿ ಈಚೆಗೆ ನಡೆದ ಡಕಾಯಿತಿ ಮತ್ತು ಶೂಟೌಟ್ ಪ್ರಕರಣವು ಜನರ ಮನಸ್ಸಿನಿಂದ ಮಾಸುವ ಮೊದಲೇ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಜನತೆಯನ್ನು ಬೆಚ್ಚಿಬೀಳಿಸಿದೆ. ಪ್ರೇಕ್ಷಣೀಯ ಸ್ಥಳವಾದ ಮೈಸೂರಿನಲ್ಲಿ ಹಲವಾರು ವಿದ್ಯಾರ್ಥಿನಿಯರು ಹೊರಗಡೆ ಹೋದಾಗ ಹುಡುಗರು ಹಿಂಬಾಲಿಸುವುದು ಹಾಗೂ ಚುಡಾಯಿಸುವುದನ್ನು ಮಾಡುತ್ತಿದ್ದು, ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ನಗರದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ. ನಗರದ ಇಂತಹ ಸ್ಥಳಗಳಲ್ಲಿ ಹಲವಾರು ಸ್ಥಳಗಳಿಗೆ ಪೊಲೀಸ್ ವಾಹನದ ಗಸ್ತು ಹಾಗೂ ಪೊಲೀಸ್ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಮೈಸೂರು ಶೈಕ್ಷಣಿಕ ಕೇಂದ್ರವಾಗಿದ್ದು, ಬೇರೆ ರಾಜ್ಯಗಳಿಂದ ವಿದ್ಯಾರ್ಥಿನಿಯರು ವಿದ್ಯಾಭ್ಯಾಸಕ್ಕೆ ಬರುತ್ತಾರೆ. ಇಂತಹ ಘಟನೆಗಳಿಂದ ಪೋಷಕರು ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಕಳುಹಿಸಲು ಹಿಂದೇಟು ಹಾಕಬಹುದು. ಆದ್ದರಿಂದ ಘಟನೆಗಳು ಮತ್ತೆ ಮರುಕಳಿಸದಂತೆ ಆಡಳಿತವರ್ಗ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲ ವಿದ್ಯಾರ್ಥಿನಿಯರಿಗೂ ಸೂಕ್ತವಾದ ಭದ್ರತೆಯನ್ನು ಒದಗಿಸಬೇಕು ಎಂದರು.

ADVERTISEMENT

ಎಐಎಂಎಸ್‌ಎಸ್‌ ಜಿಲ್ಲಾ ಕಾರ್ಯದರ್ಶಿ ಗೌರಮ್ಮ ಸಿ.ಕೆ., ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಈರಣ್ಣ ಇಸಬಾ, ಉಪಾಧ್ಯಕ್ಷೆ ಸ್ನೇಹಾ ಕಟ್ಟೀಮನಿ, ಮುಖಂಡರಾದ ಶರಣು ವಿ.ಕೆ, ಗೌತಮ ಪರತೂರಕರ್, ರಾಧಾ ಜಿ, ಶಿಲ್ಪಾ ಬಿ.ಕೆ, ವೆಂಕಟೇಶ ದೇವದುರ್ಗ, ಪ್ರೀತಿ ದೊಡ್ಡಮನಿ, ಪ್ರೀತಿ ಬಿ, ಭೀಮಾಶಂಕರ ಆಂದೋಲ, ನಾಗರಾಜ ರಾವೂರ, ಬೀರಪ್ಪ ಇದ್ದರು.

ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಆಗ್ರಹ

ಕಲಬುರ್ಗಿ: ‘ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡನೀಯವಾಗಿದ್ದು, ದುಷ್ಕೃತ್ಯವೆಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು’ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಒತ್ತಾಯಿಸಿದೆ.

‘ಅತ್ಯಾಚಾರ ಪ್ರಕರಣವು ಮೈಸೂರಿನ ಕಾನೂನು ಮತ್ತು ವ್ಯವಸ್ಥೆ ಸ್ಥಿತಿಗತಿಯನ್ನು ತೋರಿಸಿದ್ದು, ಜನರು ಸೇರಿದಂತೆ ಅಲ್ಲಿ ಬರುವ ಪ್ರವಾಸಿಗರಿಗೆ ಸುರಕ್ಷಿತ ವಾತಾವರಣ ಇಲ್ಲ. ರಾಜ್ಯದ ವಿವಿಧ ಭಾಗಗಳಲ್ಲೂ ಇಂಥದ್ದೇ ಪರಿಸ್ಥಿತಿಯಿದ್ದು, ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಂಘಟನೆಯ ಉಪಾಧ್ಯಕ್ಷೆ ಕೆ.ನೀಲಾ, ಜಿಲ್ಲಾ ಘಟಕದ ಅಧ್ಯಕ್ಷೆ ಅಮೀನಾ ಬೇಗಂ ಮತ್ತು ಜಿಲ್ಲಾ ಘಟಕದ ಕಾರ್ಯದರ್ಶಿ ನಂದಾದೇವಿ ಮಂಗೊಂಡಿ ಒತ್ತಾಯಿಸಿದ್ದಾರೆ.

‘ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಗೆ ನೆರವು ಮತ್ತು ಪರಿಹಾರ ತಕ್ಷಣವೇ ಒದಗಿಸಬೇಕು, ಉಗ್ರಪ್ಪ ಸಮಿತಿಯ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಬೇಕು, ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಬೇಕು, ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಶೀಘ್ರ ವಿಲೇವಾರಿಗೆ ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು’ ಎಂದು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.