ಸೇಡಂ: ಪಟ್ಟಣದ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಪಡಿತರ ಖರೀದಿಸಿ, ದಾಸ್ತಾನು ಮಾಡಿದ ಅಂಗಡಿಗಳ ಮೇಲೆ ಶನಿವಾರ ಆಹಾರ ಇಲಾಖೆಯ ಉಪನಿರ್ದೇಶಕ ದಯಾನಂದ ಪಾಟೀಲ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ನಾಲ್ಕು ಅಂಗಡಿಗಳಿಗೆ ಬೀಗ ಜಡಿದಿದ್ದಾರೆ.
ಪಟ್ಟಣದ ಚಿಂಚೋಳಿ ಕ್ರಾಸ್ ಮತ್ತು ಎಪಿಎಂಸಿ ಬಳಿ ತಲಾ ಒಂದು ಹಾಗೂ ಕೊತ್ತಲ ಬಸವೇಶ್ವರ ದೇವಾಲಯದ ಬಳಿ ಎರಡು ಸೇರಿದಂತೆ ಒಟ್ಟು ನಾಲ್ಕು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಸಂಬಂಧಿಸಿದ ವರದಿಯನ್ನು ಉನ್ನತ ಅಧಿಕಾರಿಗಳಿಗೆ ಕಳಿಸಲಾಗಿದೆ.
‘ಕೆಲ ದಿನಗಳ ಹಿಂದೆ ಅನ್ನಭಾಗ್ಯ ಯೋಜನೆಯ ಪಡಿತರವನ್ನು ಖರೀದಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದರ ಕುರಿತು ಮಾಹಿತಿ ಇತ್ತು. ಖಚಿತ ಮಾಹಿತಿ ಮೇರೆ ದಾಳಿ ನಡೆಸಲಾಗಿದೆ. ಉನ್ನತ ಅಧಿಕಾರಿಗಳಿಂದ ಅಂಗಡಿ ತೆರೆಯಲು ಅನುಮತಿ ಸಿಗುತ್ತದೆ. ನಂತರ ಅಂಗಡಿ ತೆರೆದು, ಪಡಿತರ ಧಾನ್ಯದ ಕುರಿತು ಪರಿಶೀಲನೆ ಮಾಡಲಾಗುತ್ತದೆ. ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಆಹಾರ ಇಲಾಖೆಯ ನಿರೀಕ್ಷಕ ಹೀರಾಸಿಂಗ ಚವಾಣ್ ತಿಳಿಸಿದ್ದಾರೆ.
ಆಹಾರ ಇಲಾಖೆಯ ಶಿರಸ್ತೆದಾರ ಪ್ರಮೀಳಾಬಾಯಿ ಮತ್ತು ಪೊಲೀಸ್ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.