ಶಹಾಬಾದ್: ನಗರದಿಂದ ಹೊರಡುವ ಜೇವರ್ಗಿ ರಾಜ್ಯ ಹೆದ್ದಾರಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಸಂಚಾರಕ್ಕೆ ತೀವ್ರ ಅಡ್ಡಿ ಉಂಟಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಮರಗೋಳ ಕಾಲೇಜಿನಿಂದ ತೊನಸನಹಳ್ಳಿ(ಎಸ್) ಗ್ರಾಮಕ್ಕೆ ಹೋಗುವ ಮಧ್ಯೆ ಅಧಿಕ ತಗ್ಗು, ಗುಂಡಿಗಳು ಉಂಟಾಗಿವೆ. ಇದರಿಂದ ಬಹುತೇಕ ಜನರಿಗೆ ಎಲ್ಲಿಲ್ಲದ ತೊಂದರೆಯಾಗುತ್ತಿದೆ. ಅಲ್ಲದೇ ಅನೇಕ ಬಾರಿ ವಾಹನ ಸವಾರು ಆಯ ತಪ್ಪಿ ಬಿದ್ದ ಉದಾಹರಣೆಗಳಿವೆ. ಈ ರಸ್ತೆಯಲ್ಲಿ ನಿತ್ಯ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಿವೆ.
ವರ್ಷದ ಹಿಂದಷ್ಟೇ ಈ ರಸ್ತೆ ನಿರ್ಮಾಣಕ್ಕೆ ಶಾಸಕರು ಅನುದಾನ ಬಿಡುಗಡೆಗೊಳಿಸಿದ್ದರು. ಆದರೆ ಗುತ್ತಿಗೆದಾರನ ಕಳಪೆ ಕಾಮಗಾರಿಯಿಂದ ರಸ್ತೆ ಕಾಮಗಾರಿ ಮುಗಿಯುವ ಮುಂಚೆಯೇ ಹಾಳಾಗಿ ಹೋಗಿದೆ. ಸುಮಾರು ವರ್ಷದಿಂದ ಇಲ್ಲಿಯವರೆಗೆ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವುಂತಾಗಿದೆ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಭಾಗದಲ್ಲಿ ಸಿಮೆಂಟ್, ಪರ್ಸಿ ಕಲ್ಲನ್ನು ಹೊತ್ತೊಯ್ಯುವ ಅನೇಕ ವಾಹನಗಳು ನಿತ್ಯ ಸಂಚರಿಸುತ್ತವೆ. ಇದರಿಂದ ರಸ್ತೆ ಹಾಳಗಿದ್ದಲ್ಲದೇ ನಿತ್ಯ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಒಮ್ಮೆ ಈ ಕಡೆ ಗಮನಹರಿಸಿ ರಸ್ತೆಯ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಬಿಜೆಪಿ ಮುಖಂಡ ಬೆಳ್ಳಪ್ಪ ಖಣದಾಳ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.